ಮಂಡ್ಯ:ಸಾಲದ ಬಾಧೆ ತಾಳಲಾರದೆ ಸೆಲ್ಪಿ ಡೆತ್ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಅಘಲಯ ಗ್ರಾಮದ ರೈತ ಸುರೇಶ್ ಅವರ ಮನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಪತ್ನಿ ಜಯಶೀಲ ಅವರಿಗೆ ಐದು ಲಕ್ಷ ರೂ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಮಳೆಯ ಅಭಾವದಿಂದಾಗಿ ರಾಜ್ಯದ ಎಲ್ಲಾ ಭಾಗದಲ್ಲಿಯೂ ಕೆರೆಗಳು ಬರಿದಾಗಿರುವುದನ್ನು ಕಾಣಬಹುದಾಗಿದೆ. ಅದೇ ರೀತಿ ಈ ಭಾಗದಲ್ಲಿ ಕೆರೆಗಳು ಭರಿದಾಗಿದೆ. ಸಂತೇಬಾಚಹಳ್ಳಿ ಹೋಬಳಿಯಲ್ಲಿ ರೂ 113 ಕೋಟಿ ವೆಚ್ಚದಲ್ಲಿ 50 ಕೆರೆಗಳಲ್ಲಿ ನೀರು ತುಂಬಿಸುವ ಯೋಜನೆ ಸದ್ಯದಲ್ಲೇ ಆರಂಭವಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರೈತರು ಧೃತಿಗೆಡದೇ ಜೀವನ ಮಾಡಬೇಕು. ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಅಧಿಕಾರಿಗಳನ್ನು ಜನರ ಹತ್ತಿರ ತರುವ ಉದ್ದೇಶದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಮುಂದಿನ ವಾರದಿಂದ ಹಮ್ಮಿಕೊಳ್ಳಲಾಗಿದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮದಿಂದ ಜನರಿಗೆ ಧೈರ್ಯ ಹೇಳುವ ಕೆಲಸ ಮಾಡಲಾಗುತ್ತದೆ ಹಾಗೂ ಗ್ರಾಮದ ಅಭಿವೃದ್ಧಿಯನ್ನು ಕೂಡ ಕಾಣಬಹುದು ಎಂದು ತಿಳಿಸಿದ ಮುಖ್ಯಮಂತ್ರಿಗಳು ಈಗಾಗಲೇ ಜಿಲ್ಲಾಧಿಕಾರಿಗಳ ಸಭೆಯನ್ನು ಕರೆದು ಬರದ ವಾಸ್ತಾವಿಕ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ನಾಡಿನ ಜನರ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಕೆಲಸನಿರ್ವಹಿಸುತ್ತಿದ್ದೆನೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ನಾರಾಯಣಗೌಡ, ಜಿಲ್ಲಾಧಿಕಾಗಳಾದ ಎನ್. ಮಂಜುಶ್ರೀ, ಪಾಂಡವಪುರ ಉಪವಿಭಾಗಾಧಿಕಾರಿ ಎಂ.ಶೈಲಜಾ, ತಹಸೀಲ್ದಾರ್ ಎಂ.ಶಿವಮೂರ್ತಿ, ಜಿ.ಪಂ.ಸದಸ್ಯ ಬಿ.ಎಲ್.ದೇವರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.