ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಉತ್ತರಾಧಿಕಾರಿಯಾಗಿ ಮಾಡಬೇಕಾದ ಕೆಲಸಗಳು ತುಂಬ ಇವೆ. ಅವರು ಪ್ರಾರಂಭಿಸಿದ "ಒಳ್ಳೆಯ ಕೆಲಸವನ್ನು" ಮುಂದುವರಿಸುವುದಾಗಿ ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಹೇಳಿದ್ದಾರೆ.
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಲಲಿತ್ ಅವರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ (ಎಸ್ಸಿಬಿಎ) ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಯುಯು ಲಲಿತ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ಸುಧಾರಣೆಗಳನ್ನು ತಂದಿದ್ದಾರೆ. ಅವರ ಉತ್ತಮ ಕೆಲಸಗಳನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.
ಸಿಜೆಐ ಲಲಿತ್ ಅವರು ಪ್ರಮುಖ ಸಾಂವಿಧಾನಿಕ ವಿಷಯಗಳ ಪಟ್ಟಿಗೆ ಆದ್ಯತೆ ನೀಡಿದರು, ಬಾಕಿ ಉಳಿದ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಿದರು. "ವಸಾಹತುಶಾಹಿ ನ್ಯಾಯ ವಿತರಣಾ ವ್ಯವಸ್ಥೆಯಿಂದ ಜನರನ್ನು ತಲುಪಬೇಕಾದ ವ್ಯವಸ್ಥೆಗೆ" ಪರಿವರ್ತಿಸಲು ಸಹಾಯ ಮಾಡಿದರು ಎಂದು ನೂತನ ಸಿಜೆಐ ಚಂದ್ರಚೂಡ್ ಹೇಳಿದರು.
ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೇ 13, 2016 ರಂದು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡ ಚಂದ್ರಚೂಡ್ ಅವರು ಸಿಜೆಐ ಆಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿದ್ದು, ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.