ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ.
ಕೊರೊನಾ ನಿಯಂತ್ರಣ, ಮಳೆ, ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸರಕಾರದ ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಆಸ್ಪತ್ರೆಯಿಂದಲೇ ಸಲಹೆ ಸೂಚನೆ ಕೊಡುತ್ತಿದ್ದಾರೆ. ಹೀಗಾಗಿ ಸಿಎಂ ಚಿಕಿತ್ಸೆಯಲ್ಲಿದ್ದರೂ 'ವರ್ಕ್ ಫ್ರಂ ಹಾಸ್ಪಿಟಲ್' ಮೊರೆ ಹೋಗಿದ್ದಾರೆ.
ಈ ಸಂಬಂಧ ಆಸ್ಪತ್ರೆಯಿಂದಲೇ ಅವರು ಸೋಮವಾರ ವಿಡಿಯೋ ಬಿಡುಗಡೆ ಮಾಡಿ,ಭಾನುವಾರದಿಂದಲೇ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇನೆ. ಸರಕಾರಿ ಕಚೇರಿ ಕೆಲಸಗಳಿಗೆ ಯಾವುದೇ ಅಡ್ಡಿ ಆಗದಂತೆ ಅಧಿಕಾರಿಗಳ ಜತೆ ನಿರಂತರವಾಗಿ ಸಮಾಲೋಚನೆ ನಡೆಸುತ್ತಿರುವೆ. ಯಾರೂ ಸಹ ಆತಂಕ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಗುಣಮುಖರಾಗಿ ನಾನು ಹೊರ ಬಂದು ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ,ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಎಸ್ವೈ ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್
ಭಾನುವಾರ ರಾತ್ರಿ 9 ಗಂಟೆಗೆ ಕೊರೊನಾ ಪಾಸಿಟಿವ್ ಆಗಿದೆ ಎಂಬುದು ಗೊತ್ತಾದ ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ. ಎಲ್ಲಾ ರೀತಿಯ ತಪಾಸಣೆ ನಡೆಸಿರುವ ವೈದ್ಯರು ಯಾವುದೇ ತೊಂದರೆ ಇಲ್ಲ, ಶೀಘ್ರ ಗುಣಮುಖರಾಗಿ ಹೋಗುತ್ತೀರೆಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಮಣಿಪಾಲ್ ಹಾಸ್ಪಿಟಲ್ಗೆ ದಾಖಲಾದ ಅವರಿಗೆ ಲಘು ಲಕ್ಷಣಗಳಿದ್ದವು. ಅವರಿಗೆ ಪ್ರೊಟೊಕಾಲ್ ಪ್ರಕಾರ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ ಎಂದು ಆಸ್ಪತ್ರೆ ಸಹ ತನ್ನ ಬುಲೆಟಿನ್ನಲ್ಲಿ ತಿಳಿಸಿದೆ.
ಮಗಳಿಗೂ ಪಾಸಿಟಿವ್
ಬಿಎಸ್ವೈ ಅವರ ಪುತ್ರಿ ಪದ್ಮಾವತಿ ಅವರಿಗೂ ಸೋಂಕು ದೃಢಪಟ್ಟಿದ್ದು, ಪಕ್ಕದ ಕೋಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ, ಗೃಹ ಕಚೇರಿ ಕೃಷ್ಣಾ, ಕಾವೇರಿಯ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 9 ಮಂದಿಗೆ ಸೋಂಕು ದೃಢಪಟ್ಟಿದೆ.
ಸಚಿವರಿಗೆ ಕ್ವಾರಂಟೈನ್
ಸಿಎಂ ಸಂಪರ್ಕದಲ್ಲಿದ್ದ ಸಚಿವರಾದ ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜು, ಕೋಟ ಶ್ರೀನಿವಾಸ ಪೂಜಾರಿ ಅವರು ಹೋಮ್ ಕ್ವಾರಂಟೈನ್ನಲ್ಲಿದ್ದಾರೆ. ಜತೆಗೆ ಕೆಲವು ಅಧಿಕಾರಿಗಳಿಗೂ ಸೋಂಕು ಭೀತಿ ಎದುರಾಗಿದೆ.
ರಾಜ್ಯಪಾಲರಿಗೆ ನೆಗೆಟಿವ್
ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಸಿಎಂ ಬಿಎಸ್ವೈ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಳೆದ ಶುಕ್ರವಾರ ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ಗೆ ಒಳಗಾಗಿದ್ದ ರಾಜ್ಯಪಾಲರಿಗೆ ನೆಗೆಟಿವ್ ವರದಿ ಬಂದಿದೆ