ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೆ 200 ಯುನಿಟ್ ಉಚಿತ ವಿದ್ಯುತ್: ಡಿಕೆಶಿ
ಚಿಕ್ಕೋಡಿ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪ್ರತೀ ಮನೆಗೂ ಪ್ರತೀ ತಿಂಗಳು 200 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲು 'ಗೃಹ ಜ್ಯೋತಿ' ಯೋಜನೆ ಜಾರಿಗೊಳಿಸಲು ತೀರ್ಮಾನಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಘೋಷಣೆ ಮಾಡಿದ್ದಾರೆ.
ಬುಧವಾರ ಚಿಕ್ಕೋಡಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡು ನುಡಿದಂತೆ ನಡೆಯುತ್ತಾ ಬಂದಿರುವ, ಸುಭದ್ರ ಆಡಳಿತದ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಜನ ಬಯಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಜನ ಸಾಮಾನ್ಯರ ಮನೆಗಳಿಗೆ ಭೇಟಿ ನೀಡಿದಾಗ ಅವರು ಕೊರೋನ ನಂತರ ಜೀವನೋಪಾಯಕ್ಕೆ ಸಾಕಷ್ಟು ಕಷ್ಟ ಪಡುತ್ತಿರುವುದು, ಪೆಟ್ರೋಲ್, ಡೀಸೆಲ್, ಎಲ್ಪಿಜಿ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆಯೇರಿಕೆಯಿಂದಾಗಿ ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಒದಗಿಸಲು ಕಷ್ಟ ಪಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.
ಇವೆಲ್ಲದರ ಜೊತೆ ಬಿಜೆಪಿ ಸರಕಾರ ನಿರಂತರವಾಗಿ ವಿದ್ಯುತ್ ದರ ಏರಿಕೆ ಮಾಡುತ್ತಿರುವ ಹಾಗೂ ಅದರಿಂದ ತಮಗೆ ಆಗುತ್ತಿರುವ ತೊಂದರೆಗಳನ್ನು ಜನ ನಮ್ಮೊಂದಿಗೆ ಹಂಚಿಕೊಂಡಿದ್ದರು. ಜನರ ಈ ಸಂಕಷ್ಟವನ್ನು ಅರಿತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ ಪ್ರತೀ ತಿಂಗಳು 200 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲು ತೀರ್ಮಾನಿಸಿದೆ ಎಂದು ಶಿವಕುಮಾ ತಿಳಿಸಿದರು.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರಕಾರ ಈಗಾಗಲೇ ಈ ಮಾದರಿಯ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಯೋಜನೆ ಜಾರಿ ತಂದು ವಿದ್ಯುತ್ ದರ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವಾಗುವ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ಕೈಗೊಂಡಿದೆ ಎಂದು ಶಿವಕುಮಾರ್ ಹೇಳಿದರು.