ಕಾರವಾರ: ಸಂವಿಧಾನ ದಿನಾಚರಣೆ: ಪ್ರತಿಜ್ಞಾವಿಧಿ ಸ್ವೀಕಾರ
ಕಾರವಾರ: ಜಿಲ್ಲಾಡಳಿತದ ವತಿಯಿಂದ ಭಾರತದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ, ನ್ಯಾಯವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಾಗಿ ತಿಳಿಸಲಾಯಿತು.
ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢ ಸಂಕಲ್ಪ ಮಾಡಬೇಕು. ನಮ್ಮ ಸಂವಿಧಾನ ಸಭೆಯಲ್ಲಿ 1949ನೇ ನವೆಂಬರ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿರುವುದಾಗಿ ಪ್ರತಿಜ್ಞೆ ಮಾಡಿಸಲಾಯಿತು.
ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಭೂಮಾಪನಾ ಇಲಾಖೆ ಸಹಾಯಕ ನಿರ್ದೇಶಕರಾಗಿ ರಾಜು ಪೂಜಾರಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಗಾಯಿತ್ರಿ ಅವರು ಸೇರಿದಂತೆ ವಿವಿಧ
ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.