ಶ್ರೀನಿವಾಸಪುರ: ಸಾರ್ವಜನಿಕರು ಕೊರೊನಾ ಹರಡುವುದನ್ನು ತಡೆಯಲು ಸಹಕರಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೊರೊನಾ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋವಿಡ್ – 19 ತಡೆಗೆ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಸಮಾಜದ ಎಲ್ಲ ವರ್ಗದ ಜನರೂ ಬೆಂಬಲಿಸಬೇಕು. ನಿಗದಿತ ದಿನಾಂಕದ ವರೆಗೆ ಮನೆಗಳಲ್ಲಿಯೇ ಉಳಿಯುವುದರ ಮೂಲಕ ವೈರಾಣು ಹರಡುವಿಕೆಯನ್ನು ತಪ್ಪಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೈರ್ಮಲ್ಯ ಪಾಲನೆ ಮಾಡುವಂತೆ ಪಿಡಿಒಗಳಿಗೆ ಸೂಚಿಸಲಾಗಿದೆ. ಗ್ರಾಮಗಲಲ್ಲಿನ ಚರಂಡಿಗಳನ್ನು ಸ್ವಚ್ಛಗೊಳಿಸಿ, ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕು ವೈದ್ಯಾಧಿಕಾರಿ ಡಾ. ವಿಜಯ ಮಾತನಾಡಿ, ಹೊರ ದೇಶಗಳಿಂದ 9 ಮಂದಿ ತಾಲ್ಲೂಕಿಗೆ ಹಿಂದಿರುಗಿದ್ದಾರೆ. ಹಾಗೆಯೇ ಹೊರ ರಾಜ್ಯಗಳಿಂದ 12 ಮಂದಿ ಬಂದಿದ್ದಾರೆ. ಅವರನ್ನು ಅವರ ಮನೆಗಳಲ್ಲಿಯೇ ನಿಗಾವಣೆಯಲ್ಲಿ ಇಡಲಾಗಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಮಾತನಾಡಿ, ವೈರಾಣು ಹರಡುವುದನ್ನು ನಿಯಂತ್ರಿಸಲು ಪಟ್ಟಣದಲ್ಲಿ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ. ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದೆ. ನೀರಿನ ಸಮಸ್ಯೆ ಇರುವ ವಾರ್ಡ್ಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.
ಉಪ ತಹಶೀಲ್ದಾರ್ ಆರ್.ನರೇಶ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಆಸ್ಪತ್ರೆ ಆಡಳಿತಾಧಿಕಾರಿ ಡಾ. ಜಿ.ಎಸ್.ಶ್ರೀನಿವಾಸ್, ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಪರಿಸರ ಅಭಿಯಂತರ ಶೇಖರ್ರೆಡ್ಡಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿಠಲ್ ತಳವಾರ್, ಸುಬ್ರಮಣಿ, ಹರೀಶ್, ಆಂಜಮ್ಮ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ