ಉತ್ತರಕನ್ನಡ ಜಿಲ್ಲೆಯಲ್ಲಿ ನಾಲ್ಕು ಮಂದಿಗೆ ಕೊರೋನಾ; ಜಿಲ್ಲೆಯಲ್ಲಿ ೪೫ ಸಕ್ರೀಯ ಪ್ರಕರಣ ಬಾಕಿ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅತ್ಯಧಿಕ ಅಂದರೆ 149 ಮಂದಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದರಿಂದ ಸೋಂಕಿತರ ಒಟ್ಟು ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದೆರಡು ದಿನಗಳಲ್ಲಿ ಸೋಂಕಿಗೊಳಗಾದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬಲೆಟಿನ್ ತಿಳಿಸಿದೆ.
ಸೋಮವಾರ ಸಂಜೆ 5ರಿಂದ ಇಂದು ಸಂಜೆ 5 ಗಂಟೆ ತನಕ 24 ಗಂಟೆಯ ಅವಧಿಯಲ್ಲಿ 149 ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಪೈಕಿ ಮಂಡ್ಯ ಜಿಲ್ಲೆಯೊಂದರಲ್ಲೇ ಇಂದು 71 ಮಂದಿಗೆ ಸೋಂಕು ತಗುಲಿದೆ. ದಾವಣಗೆರೆಯಲ್ಲಿ 22 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಕಲಬುರಗಿ ಜಿಲ್ಲೆಯಲ್ಲಿ 13, ಶಿವಮೊಗ್ಗ ಜಿಲ್ಲೆಯಲ್ಲಿ 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರು 6, ಚಿಕ್ಕಮಗಳೂರು 5, ಬಾಗಲಕೋಟೆ 5, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 4, ಹಾಸನದಲ್ಲಿ 3, ವಿಜಯಪುರ ಮತ್ತು ಯಾದಗಿರಿ, ಗದಗ ಮತ್ತು ಚಿತ್ರದುರ್ಗ, ರಾಯಚೂರು, ಬೀದರ್ ಜಿಲ್ಲೆಯಲ್ಲಿ ತಲಾ ಒಂದೊಂದು ಸೋಂಕು ಪ್ರಕರಣಗಳು ದೃಢಪಟ್ಟಿದೆ.
ಮೂವರು ಬಲಿ: ಬಳ್ಳಾರಿಯಲ್ಲಿ ಕೊರೋನ ಸೋಂಕು ದೃಢಪಟ್ಟಿರುವ 61 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಇವರು ಬೆಂಗಳೂರಿಗೆ ಪ್ರಯಾಣಿಸಿದ ಇತಿಹಾಸ ಹೊಂದಿದ್ದರು.
ಇನ್ನೊಂದು ಪ್ರಕರಣದಲ್ಲಿ ವಿಜಯಪುರದ 65 ವರ್ಷದ ವ್ಯಕ್ತಿಯೊಬ್ಬರು ಮೇ 18ರಂದು ಮೃತಪಟ್ಟಿದ್ದು, ಅವರಲ್ಲಿ ಕೊರೋನ ಸೋಂಕು ದೃಢಪಟ್ಟಿತ್ತು.
ಮೂರನೇ ಪ್ರಕರಣದಲ್ಲಿ ಬೆಂಗಳೂರಿನ 54 ವರ್ಷದ ವ್ಯಕ್ತಿಯೊಬ್ಬರು ಕೊರೋನ ಸೋಂಕಿನಿಂದ ಮೇ 18ರಂದು ಕೊನೆಯುಸಿರೆಳೆದಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.
ರಾಜ್ಯದ ಒಟ್ಟು ಸೋಂಕಿತರ ಪೈಕಿ 543 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ 40 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಬುಲೆಟಿನ್ ತಿಳಿಸಿದೆ.