ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಯಾಗುತ್ತಿದ್ದು, ಜು.26ರಿಂದ ರಾಜ್ಯದಲ್ಲಿ ಎಲ್ಲ ಪದವಿ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ರವಿವಾರ ಬೆಳಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು ಮತ್ತು ಅಧಿಕಾರಿಗಳ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
3ನೇ ಅಲೆ ಆತಂಕ ಕೋವಿಡ್ ಅನ್ ಲಾಕ್ -4 ಸಂಬಂಧ ಮಧ್ಯಂತರ ವರದಿ ಸಲ್ಲಿಸಿದ್ದು, ಈವರೆಗೂ ಪಬ್ ಮತ್ತು ಈಜುಕೊಳಗಳನ್ನು ತೆರೆಯಲು ಅವಕಾಶ ನೀಡಿಲ್ಲ, ಸಭೆ-ಸಮಾರಂಭಕ್ಕೆ ನಿರ್ಬಂಧ ಹೇರಲಾಗಿತ್ತು. ಈ ನಿಟ್ಟಿನಲ್ಲಿ ಇವುಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರವನ್ನು ರಾಜ್ಯ ಸರಕಾರ ಪ್ರಕಟ ಮಾಡಿಲ್ಲ. ಅಲ್ಲದೆ, ಮದುವೆ ಹಾಗೂ ಇತರ ಸಮಾರಂಭಗಳಿಗೆ ಹಾಕಿರುವ ಮಿತಿಯನ್ನು ತೆರವುಗೊಳಿಸಲಾಗಿಲ್ಲ. |
ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದ ಪದವಿ ವಿದ್ಯಾರ್ಥಿ ಗಳು ಭೌತಿಕ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲು ನಿರ್ಧರಿಸ ಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಜು.19ರಿಂದ ನೈಟ್ ಕರ್ಪ್ಯೂ ಅವಧಿಯನ್ನು ಪರಿಷ್ಕರಿಸಿದ್ದು, ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಮಾತ್ರ ರಾತ್ರಿ ಕರ್ಪೂ ಇರಲಿದೆ. ಇದರ ಜೊತೆಗೆ ಮೂರು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್ಗಳು ಮತ್ತು ರಂಗಮಂದಿರಗಳಲ್ಲಿ ಶೇ.50ರಷ್ಟು ಆಸನಗಳ ಭರ್ತಿಯೊಂದಿಗೆ ಪ್ರದರ್ಶನ ಆರಂಭಿಸಲು ಅನುಮತಿ ನೀಡಲಾಗಿದೆ. ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ದೇವಸ್ಥಾನ, ಪೂಜಾ ಮಂದಿರಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪೂಜೆ ಮಾಡಲು ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಲಾಕ್ ಡೌನ್ ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಗೊಳಿಸಲಾಗುತ್ತಿದೆ. ಆದರೆ, ಸಾರ್ವಜನಿಕರು ಸೋಂಕು ನಿಯಂತ್ರಣಕ್ಕೆ ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗೆ ಹಾಜರಾಗಲು ಅವಕಾಶ: ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜು.26ರಿಂದ ರಾಜ್ಯವ್ಯಾಪಿ ಪದವಿ ಕಾಲೇಜುಗಳ ತರಗತಿ ಪುನರಾರಂಭಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ರವಿವಾರ ನಗರದ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನ್ಲಾಕ್-4.1 ಅನ್ವಯ ಪದವಿ ತರಗತಿ ಪುನರಾರಂಭಿಸಲು ಸಮ್ಮತಿ ಸೂಚಿಸಿದ್ದಾರೆ.
ಜು.26ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, ಕೋವಿಡ್ ಸಂಬಂಧ ಲಸಿಕೆಯ ಮೊದಲ ಡೋಸ್ ಕಡ್ಡಾಯವಾಗಿ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕು. ಈ ಕುರಿತು ಸಂಬಂಧಪಟ್ಟ ಪ್ರಾಚಾರ್ಯರು ವಿಶೇಷ ಗಮನ ನೀಡುವಂತೆ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳು ಮಾತ್ರವಲ್ಲದೆ, ಕಾಲೇಜಿನ ಸಿಬ್ಬಂದಿ, ಉಪನ್ಯಾಸಕರು ಲಸಿಕೆ ಪಡೆದಿರಬೇಕು ಎಂದು ಸರಕಾರ ಸೂಚಿಸಿದ್ದು, ಇದರ ಬೆನ್ನಲ್ಲೇ ಕಾಲೇಜುಗಳನ್ನು ಪುನರಾರಂಭಿಸಲು ಉನ್ನತ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗೆ ಮುಂದಾಗಿದೆ. ಕಾಲೇಜಿನ ಕಟ್ಟಡ, ಶೌಚಾಲಯ, ಎಲ್ಲ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಬೇಕು ಎಂದೂ ಸೂಚಿಸಲಾಗಿದೆ. ರಾಜ್ಯದಲ್ಲಿ ಶೇ.66.14ರಷ್ಟು ಕಾಲೇಜು ವಿದ್ಯಾರ್ಥಿ, ಸಿಬ್ಬಂದಿಗೆ ಲಸಿಕೆ ಹಾಕಲಾಗಿದೆ. ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ 4.90 ಲಕ್ಷ ವಿದ್ಯಾರ್ಥಿಗಳಿದ್ದು, ಈ ಪೈಕಿ ಈವರೆಗೆ 3.13 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. 29,241 ಸಿಬ್ಬಂದಿ ಪೈಕಿ 24,875 ಜನ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.