ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡದ ಕೆಆರ್ಐಡಿಎಲ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾಮಗಾರಿಗಳ ಕುರಿತು ಕೆಆರ್ಐಡಿಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಹಲವು ಕಾಮಗಾರಿಗಳ ಬಗೆಗಿನ ಮಾಹಿತಿಗಳು ಅಪೂರ್ಣವಾಗಿದ್ದು, ಅಂತಹ ಕಾಮಗಾರಿಗಳ ಪೂರ್ಣ ಮಾಹಿತಿ ಒದಗಿಸದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದರು.
ಕೊಪ್ಪಳ ಜಿಲ್ಲೆಯಲ್ಲಿನ ಕಾಮಗಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಅಪೂರ್ಣವಾಗಿದ್ದು, ಹಳೆ ಕೆಲಸವನ್ನು ಪೂರ್ಣಗೊಳಿಸದೆ ಹೊಸ ಕಾಮಗಾರಿ ಏಕೆ ತೆಗೆದುಕೊಳ್ಳ್ಳಲಾಗುತ್ತಿದೆ ಎಂದು ಪ್ರಶ್ನಿಸಿದ ಅವರು, ಹಳೆ ಕಾಮಗಾರಿ ಸಂಪೂರ್ಣವಾಗಿ ಪೂರ್ಣಗೊಳಿಸಿದ ದಾಖಲೆ ಸಲ್ಲಿಸಿ ನಂತರ ಹೊಸ ಕಾಮಗಾರಿ ತೆಗೆದುಕೊಳ್ಳಬೇಕು ಎಂದು ತಾಕೀತು ಮಾಡಿದರು.
ಅಪೂರ್ಣವಿರುವ ಕಾಮಗಾರಿಗಳಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೆಲಸ ಮಾಡುವುದಾಗಿ ಜವಾಬ್ದಾರಿ ವಹಿಸಿಕೊಂಡು ಬೇಜವ್ದಾರಿಯಿಂದ ನಡೆದುಕೊಳ್ಳುತ್ತಿರುವ ಅಧಿಕಾರಿಗಳಿಗೆ ನಾಚಿಕೆಯಾಗಬೇಕು ಎಂದು ಸಿಡಿಮಿಡಿಗೊಂಡರು.
ಕೆಲಸ ಮಾಡದೆ ಹೆಚ್ಚುವರಿ ಕೆಲಸಗಾರರನ್ನು ನೇಮಿಸಿಕೊಳ್ಳುವ ಅಧಿಕಾರಿಗಳು ತಾವು ತಮ್ಮ ಕೆಲಸದಲ್ಲಿ ಶ್ರದ್ಧೆ ತೋರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಕೆಲಸ ಮಾಡುವ ಮನೋಭಾವನೆ ಅಧಿಕಾರಿಗಳಿಗಿಲ್ಲ. ಸುಮಾರು 2 ವರ್ಷಗಳ ಹಿಂದೆ ಆರಂಭವಾದ ಕಾಮಗಾರಿಗಳು ಕುಟುಂತ್ತಾ ಸಾಗಿರುವುದೇ ಅಧಿಕಾರಿಗಳ ಕಾರ್ಯವೈಖರಿ ತೋರಿಸುತ್ತದೆ. ರಾಯಚೂರಿನಲ್ಲಿರುವ ಹಾಸ್ಟೆಲ್ ಕಟ್ಟಡಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಹಂಚನಾಳ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಗೆ ಕಂಪೌಂಡ್ ನಿರ್ಮಿಸುವಲ್ಲಿ ಎದುರಾಗುತ್ತಿರುವ ಸಮಸ್ಯೆ ಕುರಿತು ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳು ಕಂಪೌಂಡ್ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಆದೇಶಿಸಿದರು.
ಸುಮಾರು 3-4 ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಗಳು ಅನಿರೀಕ್ಷಿತವಾಗಿ ಸ್ಥಗಿತಗೊಳಿಸುತ್ತಿರುವುದು ಏಕೆ, ಈ ಕುರಿತು ಅಧಿಕಾರಿ ಸಂಪೂರ್ಣವಾದ ದಾಖಲೆ ಒದಗಿಸಬೇಕು. ಮುಂಗಡ ಹಣ ನೀಡುತ್ತಿರುವುದರಿಂದ ಸಮಸ್ಯೆ ಹೆಚ್ಚಾಗುತ್ತಿದ್ದು, ಅದರಿಂದ ಅಧಿಕಾರಿಗಳು ಬೇಜವಾಬ್ದಾರಿ ತೋರಿಸುತ್ತಿದ್ದಾರೆ. ಅದಕ್ಕೆ ಮುಂಗಡ ಹಣ ನೀಡುವುದು ಸೂಕ್ತವಲ್ಲ ಎಂದರು. ಯಾದಗಿರಿ ಜಿಲ್ಲೆಯಲ್ಲಿಯೂ ಬಾಕಿ ಕಾಮಗಾರಿಗಳು ಹೆಚ್ಚಿನ ಸಂಖೆಯಲ್ಲಿದ್ದು, ಜನವರಿ 31ರೊಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿನ ಕಾಮಗಾರಿಗಳು ಪ್ರಗತಿಯಲ್ಲಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನು ಹೆಚ್ಚಿನ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕೆಆರ್ಐಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಾಲಯ್ಯ ಅವರು ಮಾತನಾಡಿ, ಅಧಿಕಾರಿಗಳು ಸರಕಾರದ ಕೆಲಸವನ್ನು ದೇವರ ಕೆಲಸವೆಂದು ತಿಳಿದು ಒಳ್ಳೆಯ ಕೆಲಸ ಮಾಡಬೇಕು. ಕೆಲಸ ನಿಮಿತ್ತ ಜಾರಿಕೊಳ್ಳುವಲ್ಲಿ ಬುದ್ದಿವಂತಿಕೆ ತೋರಿಸುವ ಅಧಿಕಾರಿಕಾರಿಗಳು ಬುದ್ದಿವಂತಿಕೆಯಿಂದ ಕೆಲಸ ಮಾಡಬೇಕು ಇಲ್ಲದಿದ್ದರೆ ಮುಲಾಜಿಲ್ಲದೆ ಚಾಟಿ ಏಟು ನೀಡಲಾಗುವುದು ಎಂದರು. ಕಲ್ಯಾಣ ಕರ್ನಾಟಕದ ಆರು ಜಿಲ್ಲೆಯ ಕೆಆರ್ಐಡಿಎಲ್ ಅಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.