ಶಿಕ್ಷಕಿ ದಲಿತೆ ಎಂಬ ಕಾರಣಕ್ಕೆ ಗ್ರಾಮಸ್ಥರಿಂದ ಅಂಗನವಾಡಿ ಪ್ರವೇಶಕ್ಕೆ ನಿರಾಕರಣೆ; ನಾಳೆ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಹಾರ: ನಟರಾಜ್
ಬೆಂಗಳೂರು: ಅಂಗನವಾಡಿ ಶಿಕ್ಷಕಿಯೊಬ್ಬರಿಗೆ ದಲಿತೆ ಎಂಬ ಕಾರಣಕ್ಕೆ ಗ್ರಾಮಸ್ಥರು ಕೇಂದ್ರಕ್ಕೆ ಪ್ರವೇಶ ನಿರಾಕರಿಸಿರುವ ಪ್ರಕರಣ ದೊಡ್ಡಬಳ್ಳಾಪುರ ತಾಲೂಕಿನ ಮಳೆಕೋಟೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
“ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಜು.31ರಂದು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿ ಶಿಕ್ಷಕಿಗೆ ಕೆಲಸಕ್ಕೆ ಅನುವು ಮಾಡಿಕೊಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್.ಎಸ್ ತಿಳಿಸಿದ್ದಾರೆ.
ಶನಿವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೆಳೆಕೋಟೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರಿಗೆ ಮನವರಿಕೆ ಮಾಡಿ ಶಿಕ್ಷಕಿಗೆ ಕೆಲಸ ಮಾಡಲು ಅನುವು ಮಾಡಿಕೊಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪರಿಶಿಷ್ಠ ಜಾತಿಗೆ ಸೇರಿದ ಶಿಕ್ಷಕಿ ಆನಂದಮ್ಮ ರಾಜಘಟ್ಟದಲ್ಲಿ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಅಂಗನವಾಡಿ ಶಿಕ್ಷಕಿಯಾಗಿ ಭಡ್ತಿ ನೀಡಿ, ಮೆಳೆಕೋಟೆ ಗ್ರಾಮಕ್ಕೆ 2022ರ ಸೆಪ್ಟೆಂಬರ್ನಲ್ಲಿ ವರ್ಗಾವಣೆ ಮಾಡಲಾಗಿತ್ತು.10 ತಿಂಗಳಿಂದ ಅವರು ಕೇಂದ್ರಕ್ಕೆ ಪ್ರವೇಶಿಸಲಾಗದೇ ಹೊರಗೇ ನಿಲ್ಲುತ್ತಿದ್ದಾರೆಂದು ತಿಳಿದುಬಂದಿದೆ.