ಅಟ್ರಾಸಿಟಿ ಪ್ರಕರಣ ವರದಿಯಾದ ಕೂಡಲೇ ಪರಿಶೀಲಿಸಿ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ

Source: SO News | By Laxmi Tanaya | Published on 10th July 2023, 9:46 PM | Coastal News | Don't Miss |

ಮಂಗಳೂರು: ಜಿಲ್ಲೆಯಲ್ಲಿ ಜಾತಿ ನಿಂದನೆ ಹಾಗೂ ದೌರ್ಜನ್ಯ ಪ್ರಕರಣ ವರದಿಯಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

 ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಯಾವುದೇ ಸ್ಥಳದಲ್ಲಿ ಅಟ್ರಾಸಿಟಿ ಪ್ರಕರಣ ವರದಿಯಾದ ತಕ್ಷಣ ಸಮಾಜ ಕಲ್ಯಾಣ ಇಲಾಖೆಯ ತಾಲೂಕುಗಳಲ್ಲಿರುವ ಸಹಾಯಕ ನಿರ್ದೇಶಕರು ಕೂಡಲೇ ಪ್ರಕರಣ ಕಂಡುಬಂದ ಸ್ಥಳಕ್ಕೆ ತೆರಳಿ ಮಹಜರು ನಡೆಸಿ, ನಿಯಮಾನುಸಾರ ವರದಿ ನೀಡಬೇಕು, ಈ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ನೆರವು ಪಡೆಯಬೇಕು ಹಾಗೂ ತತ್ಸಂಬಂಧ ರಚಿಸಲಾಗಿರುವ ಮೊಬೈಲ್ ವಾಟ್ಸಪ್ ಗ್ರೂಪ್‍ನಲ್ಲಿ ಮಾಹಿತಿ ನೀಡಬೇಕು, ಸಂಬಂಧಿಸಿದವರಿಗೆ ಪರಿಹಾರ ಮೊತ್ತ ಪಾವತಿಸುವ ಕೆಲಸವಾಗಬೇಕು, ಮುಖ್ಯವಾಗಿ ಉಪವಿಭಾಗಿಯ ಸಮಿತಿ ಸಭೆಯಲ್ಲಿ ವರದಿಯಾದ ಪ್ರಕರಣಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ಸಮಸ್ಯೆಯನ್ನು ಪರಿಹರಿಸಬೇಕು, ಅಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಜಿಲ್ಲಾ ಮಟ್ಟದ ಸಭೆಯಲ್ಲಿ ಪ್ರಸ್ತಾಪಿಸಬೇಕು, ಅದನ್ನು ಹೊರತುಪಡಿಸಿ ಸಬೂಬು ನೀಡಿದರೆ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದವರು ಎಚ್ಚರಿಕೆ ನೀಡಿದರು.

ದೌರ್ಜನ್ಯ ಪ್ರಕರಣಗಳು ಘಟಿಸಿದ ಕೂಡಲೇ ಆ ಪ್ರಕರಣಗಳ ಚಾರ್ಜ್ ಶೀಟ್ ಆಗಬೇಕು, ಯಾವುದೇ ಕಾರಣಕ್ಕೂ ಇಂತಹ ದೌರ್ಜನ್ಯ ಪ್ರಕರಣಗಳನ್ನು ಹಗುರವಾಗಿ ಪರಿಗಣಿಸಬಾರದು, ಅಟ್ರಾಸಿಟಿ ಪ್ರಕರಣಗಳಲ್ಲಿ ಕೇವಲ ಪರಿಹಾರ ನೀಡುವುದು ಮಾತ್ರ ಇಲಾಖೆಯ ಕೆಲಸ ಆಗಬಾರದು, ಜೊತೆಗೆ ಮುಂದೆ ಅಂತಹ ಪ್ರಕರಣಗಳು ನಡೆಯದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ಕುಂದು ಕೊರತೆ ಸಭೆ ಸೇರಿದಂತೆ ಎಲ್ಲಾ ಸಭೆಗಳನ್ನು ನಿಗದಿತ ದಿನಗಳಲ್ಲಿ ನಿಯಮಿತವಾಗಿ ನಡೆಸಲು ಕ್ರಮ ವಹಿಸಬೇಕು ಹಾಗೂ ಸಭೆಯಲ್ಲಿ ಸ್ಪಷ್ಟ ಮಾಹಿತಿಯನ್ನು ಅಧಿಕಾರಿಗಳು ಒದಗಿಸಬೇಕು ಅಲ್ಲಿ ಯಾವುದೇ ಕಾರಣ ನೀಡಬಾರದು ಎಂದು ಎಚ್ಚರಿಕೆ ನೀಡಿದರು.

2023ರ ಜನವರಿಯಿಂದ ಜೂನ್ ತಿಂಗಳವರೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಒಟ್ಟು 43 ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 39 ಪ್ರಕರಣಗಳಲ್ಲಿ ಒಟ್ಟು 26.87 ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಮಾಲತಿ ಸಭೆಯಲ್ಲಿ ಮಾಹಿತಿ ನೀಡಿದರು.

ಮಂಗಳೂರು ಪೊಲೀಸ್ ಕಮಿಷನ್‌ರೇಟ್ ವ್ಯಾಪ್ತಿಯಲ್ಲಿ ಒಟ್ಟು 18ರಲ್ಲಿ 17 ಪ್ರಕರಣಗಳಲ್ಲಿ 13.50 ಲಕ್ಷ ರೂ, ಬಂಟ್ವಾಳದಲ್ಲಿ ದಾಖಲಾದ 7 ಪ್ರಕರಣಗಳಲ್ಲಿ 5 ಪ್ರಕರಣಗಳಿಗೆ 6.12 ಲಕ್ಷ ರೂ., ಬೆಳ್ತಂಗಡಿಯಲ್ಲಿ ದಾಖಲಾದ 9 ಪ್ರಕರಣಗಳಿಗೆ 3.75 ಲಕ್ಷ ರೂ, ಪುತ್ತೂರಿನಲ್ಲಿ ದಾಖಲಾದ 7 ಪ್ರಕರಣಗಳಲ್ಲಿ 6ಕ್ಕೆ 2.50 ಲಕ್ಷ ರೂ, ಸುಳ್ಯದಲ್ಲಿ ದಾಖಲಾದ 2 ಪ್ರಕರಣಗಳಲ್ಲಿ 1 ಲಕ್ಷ ರೂ ಪರಿಹಾರ ನೀಡಲಾಗಿದೆ ಎಂದು ಅವರು ವಿವರ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನ್ಶು ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ಜಿಲ್ಲಾ ಉಸ್ತುವಾರಿ ಮತ್ತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ವಿಶ್ವನಾಥ್ ಬಂಟ್ವಾಳ್ ಮಾತನಾಡಿದರು.

ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಆನ್‍ಲೈನ್ ಮೂಲಕ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿಯವರು ಸ್ವಾಗತಿಸಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...