ಬೈಂದೂರು : ಕೋವಿಡ್ 19 ರ ಸಾಂಕ್ರಾಮಿಕ ರೋಗ ಹರಡುವಿಕೆಯಿಂದಾಗಿ ಸ್ಥಗಿತಗೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನ ಪುನರಾರಂಭವಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಪ್ರಥಮವಾಗಿ ಜಡ್ಕಲ್ ಗ್ರಾಮ ಪಂಚಾಯಿತಿಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು. ತಹಸೀಲ್ದಾರ್ ಬೈಂದೂರು, ಜಡ್ಕಲ್ ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಯಿತು.
ಜಡ್ಕಲ್ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಹಾಗೂ ಸಿಬ್ಬಂದಿಗಳನ್ನು ಭೇಟಿ ಮಾಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಲ್ಲಿನ ಗ್ರಂಥಾಲಯದ ಸಿಬ್ಬಂದಿಗಳೊಂದಿಗೆ ಚರ್ಚಿಸಲಾಯಿತು. ಈಗಾಗಲೇ ಗ್ರಂಥಾಲಯದಲ್ಲಿ 3ಸಾವಿರ ಪುಸ್ತಕಗಳನ್ನು ನಿರ್ವಹಣೆ ಮಾಡಲಾಗುತ್ತಿದೆ. ವಿಕಲಚೇತನರ ಕಚೇರಿಗೆ ಭೇಟಿ ನೀಡಿ ವಿಕಲಚೇತನರಿಗೆ ಸಂಬಂಧಪಟ್ಟಂತಹ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು
ಉಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ಹಾಕುವ ಲಸಿಕೆ ಹಾಗೂ ಕೋವಿಡ್ 19 ಲಸಿಕೆ ಕುರಿತು ಎಎನ್ ಎಂ ರವರೊಂದಿಗೆ ಚರ್ಚಿಸಲಾಯಿತು.
ನಂತರ ಸೆಳ್ಕೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿದ ಅಧಿಕಾರಿಗಳ ತಂಡ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ತರಗತಿಯಲ್ಲಿದ್ದ ಮಕ್ಕಳೊಂದಿಗೆ ಮಾತನಾಡಿದರು.
ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಬೀಸಿನಪಾರೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಗ್ರಾಮಕ್ಕೆ ಸಂಬಂಧಿಸಿದಂತೆ ಒಟ್ಟು 69 ಅರ್ಜಿಗಳು ಸ್ವೀಕೃತಗೊಂಡಿದ್ದು , ಸಂಜೆ ಮುದೂರು ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಮುದೂರು ಇಲ್ಲಿ ಮುದೂರು ಗ್ರಾಮದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಮುದೂರು ಗ್ರಾಮಕ್ಕೆ ಸಂಬಂಧಿಸಿದಂತೆ 41 ಒಟ್ಟು 110 ಅರ್ಜಿಗಳ ಪೈಕಿ ಹದಿನೈದು ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲಾಯಿತು. 35 ಅರ್ಜಿಗಳಿಗೆ ಹಿಂಬರಹ ನೀಡಲು ಸೂಚಿಸಲಾಯಿತು. ಇನ್ನುಳಿದ 60 ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ಒಂದು ವಾರದಲ್ಲಿ ದಿನದೊಳಗೆ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಲಾಗಿದೆ. ಅಹವಾಲು ಸ್ವೀಕರಿಸಿದ ನಂತರವೇ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ತಕ್ಷಣ ಸ್ಥಳ ಪರಿಶೀಲನೆ ನಡೆಸಲು ಸಹ ಸೂಚನೆ ನೀಡಿ ವರದಿ ಸಲ್ಲಿಸಲು ಅಧಿಕಾರಿಗಳು ಸೂಚಿಸಿದರು.