ಶ್ರೀನಿವಾಸಪುರ: ಯುವ ಸಮುದಾಯ ದೇಶದ ಬಹು ದೊಡ್ಡ ಸಂಪತ್ತು. ಸದೃಢ ಯುವ ಜನರ ಸಾಂಘಿಕ ಶ್ರಮಿದಿಂದ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಎಂ.ವೆಂಕಟರಾಮಪ್ಪ ಹೇಳಿದರು.
ಪಟ್ಟಣದ ಚೌಡೇಶ್ವರಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕೋಲಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಜನಪದ ಹಾಗೂ ಸಾಂಸ್ಕೃತಿಕ ಗ್ರಾಮೀಣಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವ ಸಮ್ಮೇಳನ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ದೇಶದ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯಬೇಕು. ವಿದ್ಯುನ್ಮಾನ ಮಾಧ್ಯಮದ ದುಷ್ಪರಿಣಾಮಕ್ಕೆ ಒಳಗಾಗದೆ ಉತ್ತಮ ವ್ಯಕ್ತಿತ್ವ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು. ಪ್ರತಿಯೊಬ್ಬರೂ ನಮ್ಮ ಸಂಸ್ಕೃತಿಯ ರಾಯಭಾರಿಗಳಾಗಬೇಕು. ಕಲೆ, ಸಾಗಿತ್ಯ, ಸಂಗೀತ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು.ಮುಖ್ಯವಾಗಿ ಜನಪದ ಕಲೆ ನಶಿಸಿ ಹೋಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಜಣ್ಣ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ, ಬದುಕನ್ನು ಕಟ್ಟಿಕೊಳ್ಳಬೇಕು. ಈಗ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅಂತರ ಜಾತಿ ವಿವಾಹವಾದ ದಂಪತಿಗೆ ರೂ.3 ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆ, ಸಾಹಿತ್ಯ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಯುವಕರನ್ನು ತೊಡಗಿಸುವ ಉದ್ದೇಶದಿಂದ ಇಂಥ ಸಮ್ಮೇಳನ ಹಾಗೂ ಕಾರ್ಯಾಗಾರ ಏರ್ಪಡಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಯುವಕರು ಹಾಗೂ ಯುವತಿಯರು ಭಾಗವಹಿಸಬೇಕು. ಉತ್ತಮ ಭವಿಷ್ಯ ನಿರ್ಮಾಣ ಕಾರ್ಯಕ್ಕೆ ಅಗತ್ಯವಾದ ತರಬೇತಿ ಪಡೆಯಬೇಕು ಎಂದು ಹೇಳಿದರು.
ಜನಪದ, ಕಲೆ ಹಾಗೂ ಸಾಹಿತ್ಯಕ್ಕೆ ತಾಯಿ ಬೇರು ಇದ್ದಂತೆ. ಅದನ್ನು ಮರೆತರೆ ಉಳಿಯುವುದು ಅತಿ ಕಡಿಮೆ. ಆದ್ದರಿಂದ ಜಾನಪದ ಕಲಾವಿದರನ್ನು ಗೌರವಿಸುವ ಸಂಪ್ರದಾಯ ಮುಂದುವರೆಯಬೇಕು. ಅದಕ್ಕೆ ಪೂರಕವಾದ ತರಬೇತಿ ಹಾಗೂ ಅವಕಾಶವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೆ.ವಿ.ಶ್ರೀಧರ್, ಸಾಯಿ ಪದವಿ ಕಾಲೇಜಿನ ಪ್ರಾಂಶುಪಾಲ ರಾಮಾಂಜಿ, ಕಲಾವಿದರಾದ ಶಾರದಮ್ಮ, ಬಿ.ವಿ.ಗಿರೀಶ್, ಕೃಷ್ಣಪ್ಪ, ಡಾ. ಬಿ.ಆರ್.ಅಂಬೇಡ್ಕರ್ ಜನಪದ ಹಾಗೂ ಸಾಂಸ್ಕೃತಿಕ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ನಾರಾಯಣಸ್ವಾಮಿ ಇದ್ದರು.