ಬಡವರಿಗೆ ಅನುಕೂಲಕರವಾಗಿ ಕಾರ್ಯ ನಿರ್ವಹಿಸುತ್ತಿರುವ ಇನ್ಸ್ಟಿಟ್ಯೂಟ್ ಆಫ್ ನೆಪ್ರೋಲಜಿ – ಡಾ.ಶರಣಪ್ರಕಾಶ್ ಆರ್ ಪಾಟೀಲ್
ಬೆಂಗಳೂರು: ಇನ್ಸ್ಟಿಟ್ಯೂಟ್ ಆಫ್ ನೆಪ್ರೋಲಜಿ ಬಡವರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸಾ ಸೌಲಭ್ಯವನ್ನು ಒದಗಿಸುತ್ತಾ ಬಂದಿದೆ. ಈ ಸಂಸ್ಥೆಗೆ ತನ್ನದೇ ಆದ ಹೆಸರಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರು ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಇನ್ಸ್ಟಿಟ್ಯೂಟ್ ಆಫ್ ನೆಪ್ರೋಲಜಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅಲ್ಲಿ ಉತ್ತಮ ಚಿಕಿತ್ಸೆ ಸೌಲಭ್ಯಗಳು ದೊರಕುತ್ತಿವೆ. ಆದರೆ ಉಪಕರಣಗಳ ಕೊರತೆಯಿದೆ. ಒಂದಿಷ್ಟು ಟೆಸ್ಟ್ಗಳನ್ನು ಹೊರಗಡೆ ಮಾಡಬೇಕಾಗಿದೆ. ಅತ್ಯಂತ ಕಡಿಮೆ ವೆಚ್ಚದಲ್ಲಿ ಮೂತ್ರಪಿಂಡ ಕಸಿಯನ್ನು ಇಲ್ಲಿ ಮಾಡಲಾಗುತ್ತದೆ. ಕಳೆದ ವರ್ಷ 43 ಮೂತ್ರಪಿಂಡ ಕಸಿಯನ್ನು ಈ ಸಂಸ್ಥೆ ಮಾಡಿದೆ. ಆದರೆ ಜನವರಿಯಿಂದ ಇಲ್ಲಿಯವರೆಗೆ 26 ಮೂತ್ರಪಿಂಡ ಕಸಿ ಮಾಡಲಾಗಿದೆ ಎಂದು ತಿಳಿಸಿದರು.
ಇನ್ಸ್ಟಿಟ್ಯೂಟ್ ಆಫ್ ನೆಪ್ರೋಲಜಿಯು ಮೂತ್ರಪಿಂಡ ಕಸಿಗೆ ಯಾವುದೇ ಹಣ ತೆಗೆದುಕೊಳ್ಳದೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚ ಸುಮಾರು ಎರಡು ಲಕ್ಷ ರೂ.ಗಳಿಂದ ಎರಡೂವರೆ ಲಕ್ಷ ರೂ.ಗಳ ವರಗೆ ಇದ್ದು, ಅತ್ಯಂತ ಕಡಿಮೆ ವೆಚ್ಚದಲ್ಲಿ ಬಡವರಿಗೆ ಈ ಸಂಸ್ಥೆಯು ಚಿಕಿತ್ಸಾ ಸೌಲಭ್ಯವನ್ನು ಒದಗಿಸುತ್ತಿದೆ. ಎ.ಬಿ.ಎ.ಆರ್.ಕೆಯು ಎರಡು ಲಕ್ಷ ರೂ. ನೀಡುತ್ತದೆ ಎಂದು ಹೇಳಿದರು.
ರಾಮನಗರದಲ್ಲಿ ರಾಜೀವ್ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ ಚರ್ಚೆಯಾಗಿದ್ದು, ಈಗಾಗಲೇ ಟೆಂಡರ್ ಕರೆಯಲಾಗಿದೆ. ರಾಮನಗರದಲ್ಲಿ ಆಡಳಿತ ಕಚೇರಿ ಹಾಗೂ ಕನಕಪುರದಲ್ಲಿ ಮೆಡಿಕಲ್ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.