ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಕಳೆದ ಹಲವಾರು ವಿಧಾನಸಭಾ ಚುನಾವಣೆಗಳಲ್ಲಿ ಈ ಸಮುದಾಯದ ಮತಗಳು ಬಿಜೆಪಿ ಮತ್ತು ಜೆಡಿಎಸ್ ಪಾಲಾಗಿವೆ.
ಒಕ್ಕಲಿಗ ಸಮುದಾಯ ಸಾಮಾನ್ಯವಾಗಿ ಎಚ್.ಡಿ.ದೇವೇಗೌಡರ ಕುಟುಂಬದ ಆದೇಶದಂತೆ ಇಲ್ಲಿ ನಡೆದುಕೊಳ್ಳುತ್ತಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಜೆ.ಡಿ.ಎಸ್ ನ ಮತ ಬುಟ್ಟಿಗೆ ಕೈ ಹಾಕಿದ್ದು ಹಾಲಕ್ಕಿ ಸಮುದಾಯವನ್ನು ಒಲಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದಾರೆ.
ತಾಲೂಕಿನ ಬಡಗೇರಿ ಗ್ರಾಮದಲ್ಲಿರುವ ಹಾಲಕ್ಕಿ ಜಾನಪದ ಕೋಗಿಲೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಗೌಡರ ಮನೆಗೆ ಕೆನರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಭೇಟಿನೀಡಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಸುಕ್ರಿ ಗೌಡರವರು ಚುನಾವಣೆಯಲ್ಲಿ ಗೆದ್ದು ಬರುವಂತೆ ಅಂಜಲಿತಾಯಿ ಅವರಿಗೆ ಜಾನಪದ ಹಾಡು ಹೇಳಿ ಹರಸಿ ಹಾರೈಸಿದರು.
ಈ ಸಂದರ್ಭದಲ್ಲಿ ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವ್ಕರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅಂಜಲಿ ನಿಂಬಾಳ್ಕರ್,ಭಾವಿಕೇರಿ ಗ್ರಾಪಂ ಅಧ್ಯಕ್ಷೆ ದೀಪಾ ನಾಯ್ಕ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು,ಗ್ರಾಮಸ್ಥರು ಉಪಸ್ಥಿತರಿದ್ದರು.