ಧಾರವಾಡ : ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆಯದ ಕಾರಣ ಅಂತಿಮವಾಗಿ ಹನ್ನೊಂದು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಕಣದಲ್ಲಿ ಉಳಿದ ಅಭ್ಯರ್ಥಿಗಳು:
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷದ ಅಭ್ಯರ್ಥಿಗಳಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್.ಎಂ. ಕುಬೇರಪ್ಪ, ಜನತಾದಳ (ಜಾತ್ಯಾತೀತ)ದ ಕಲ್ಲೂರ ಶಿವಶಂಕರ ಚನ್ನಪ್ಪ, ಭಾರತೀಯ ಜನತಾ ಪಕ್ಷದ ಸಂಕನೂರ. ಎಸ್.ವಿ., ಮತ್ತು ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕಾಂಬಳೆ, ಶಿವಸೇನಾದ ಸೋಮಶೇಖರ್ ವ್ಹಿ. ಉಮರಾಣಿ, ಇತರ ಅಭ್ಯರ್ಥಿಗಳಾಗಿ ಪಕ್ಷೇತರರಾದ ದಶರಥ ಚಂದ್ರಹಾಸ ರಂಗರಡ್ಡಿ, ಬಿ.ಡಿ, ಹಿರೇಗೌಡರ, ಬಸವರಾಜ ಗುರಿಕಾರ, ಬಸವರಾಜ ಎಸ್. ತೇರದಾಳ, ನಾಗರಕಟ್ಟಿ ಮಹ್ಮದ ಶಫಿವುದ್ದೀನ್ ಎಸ್., ತಳವಾರ ಶಿವಕುಮಾರ್ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣಾಧಿಕಾರಿಗಳೂ ಆಗಿರುವ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಸಹಾಯಕ ಚುನಾವಣಾಧಿಕಾರಿಯಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಮತ್ತಿತರ ಅಧಿಕಾರಿಗಳು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾಗಿರುವ ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಉಪಸ್ಥಿತರಿದ್ದರು.