ಮಂಡ್ಯ : ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಗೊಳಿಸಿದೆ. ಚುನಾವಣಾ ಗುರುತಿನ ಚೀಟಿ ಹೊಂದಿದ್ದರೂ ಸಾರ್ವಜನಿಕರು ತಪ್ಪದೇ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿಂದು ನಡೆದ ಅಂತಿಮ ಮತದಾರರ ಪಟ್ಟಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮುಖ್ಯ ಚುನಾವಣಾಧಿಕಾರಿ ಅವರ ನೇತೃತ್ವದಲ್ಲಿ ಕರ್ನಾಟಕದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮತದಾರರ ಪಟ್ಟು ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು. ಮಂಡ್ಯ ಜಿಲ್ಲೆಯ ಪ್ರಗತಿಯನ್ನು ತಿಳಿಸಿದ್ದೇವೆ ಎಂದರು.
18 ವರ್ಷ ತುಂಬಿ ಮತದಾರರ ಪಟ್ಟಿಗೆ ಸೇರ್ಪಡೆ ಕೋರಿ ಅರ್ಜಿ ಸಲ್ಲಿಸಿದವರು, ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿರುವವರು ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು
ಮತದಾರರ ಪಟ್ಟಿಯಿಂದ ಕೈ ಬಿಡುವಂತೆ ಬಂದಿದ್ದ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳ ಮಹಜರ್ ಮಾಡಿ ನಂತರ ಮತಾದಾರರ ಪಟ್ಟಿಯಿಂದ ಕೈಬಿಟ್ಟಿದ್ದೇವೆ. ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ 60 ಸಾವಿರಕ್ಕೂ ಹೆಚ್ಚಿನ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಅಧಿಕಾರಿಗಳು ಯಾವುದೇ ಹೆಸರನ್ನು ಸ್ವಯಂ ಪ್ರೇರಿತವಾಗಿ ಕೈಬಿಟ್ಟಿಲ್ಲ ಎಂದರು.
60000 ಕ್ಕೂ ಹೆಚ್ಚಿನ ಮತದಾರರು ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಕೈ ಬಿಟ್ಟಿದ್ದು,ಮಂಡ್ಯ ಜಿಲ್ಲೆಯ ಎಲ್ಲಾ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಮತದಾರರು ತಾವು ವಾಸವಿರುವ ಸ್ಥಳದಲ್ಲಿ ಅರ್ಜಿ ಸಲ್ಲಿಸದೇ ಮತದಾರರ ಪಟ್ಟಿಯಿಂದ ಕೈಬಿಟ್ಟ ಪ್ರಕರಣಗಳು ಇದ್ದಲ್ಲಿ ಅಂತಹವರು ನೇರವಾಗಿ ತಹಶೀಲ್ದಾರ್ ಅವರ ಗಮನಕ್ಕೆ ತರಬೇಕು. ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗರಾಜು, ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ, ಪಾಂಡವಪುರ ವಿಭಾಗಧಿಕಾರಿ ಮೊಹಮ್ಮದ್, ಜಿಲ್ಲಾಧಿಕಾರಿಯ ಸಹಾಯಕ ಸ್ವಾಮಿಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.