ಮಂಗಳೂರು : ರಾಜ್ಯ ಸರಕಾರ ಮೀನುಗಾರರಿಗೆ ಡೀಸೆಲ್ ಸಬ್ಸಿಡಿ ನೀಡದೇ ಇರುವುದರಿಂದ ಇದನ್ನೇ ನಂಬಿಕೊಂಡಿದ್ದ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಡೀಸೆಲ್ ಬೆಲೆ ಹೆಚ್ಚುತ್ತಿರುವುದರಿಂದ ನಷ್ಟದ ಭೀತಿಯಿಂದ ಬೋಟ್ ಸಮುದ್ರಕ್ಕಿಳಿಯುತ್ತಿಲ್ಲ. ಮೀನುಗಾರರಿಗೆ ತಕ್ಷಣ ಡೀಸೆಲ್ ಸಬ್ಸಿಡಿ ಬಿಡುಗಡೆ ಮಾಡಬೇಕು ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊರೋನಾ ಸಮಸ್ಯೆ ಮತ್ತೆ ಹೆಚ್ಚಾಗುತ್ತಿದೆ. ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವನ್ನು ಜಿಲ್ಲೆಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕು. ಗಡಿ ಸಂಚಾರದ ಸಮಸ್ಯೆ ಬಗೆಹರಿಸಲು ತಕ್ಷಣ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಸಂಯುಕ್ತ ಸಭೆ ಕರೆಯಬೇಕು ಅವರು ಒತ್ತಾಯಿಸಿದರು.
ಕೇರಳ ಭಾಗದಿಂದ ಸಾವಿರಾರು ಮಂದಿ ನಿತ್ಯ ಮಂಗಳೂರಿಗೆ ಉದ್ಯೋಗ ನಿಮಿತ್ತ ಬರುತ್ತಾರೆ. ಗಡಿ ಬಂದ್ ಮಾಡಿದರೆ ಅವರು ಸಂಕಷ್ಟಕ್ಕೊಳಗಾಗುತ್ತಾರೆ. ಆದ್ದರಿಂದ ಸಮಸ್ಯೆಯನ್ನು ಶೀಘ್ರ ಇತ್ಯರ್ಥ ಪಡಿಸಬೇಕು ಎಂದವರು ಆಗ್ರಹಿಸಿದರು.