ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ರವಿವಾರ ವರದಿಯಾಗಿದೆ.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದ ಸಂಗನಬಸಪ್ಪ (36), ಪತ್ನಿ ರೇಖಾಂಶ(29), ಪುತ್ರ ಅಗಸ್ಯ (8), ಭೀಮಾಶಂಕರ್ (26) ಮತ್ತು ಕಾರು ಚಾಲಕ ಮಧುಸೂದನ್ (27) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಸಂಗನಬಸಪ್ಪರ ಮತ್ತೋರ್ವ ಪುತ್ರ ಆದರ್ಶ(3), ಪುತ್ರಿ ಅನ್ನಿಕಾ(5) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದವರು ಶನಿವಾರ ರಾತ್ರಿ ವಿಜಯಪುರದಿಂದ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಿದ್ದರು. ರವಿವಾರ ನಸುಕಿನ ವೇಳೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಲಾರಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಾರು ಚಾಲಕ ಮಧುಸೂದನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.