ಪ್ರವಾಹಭೀತಿ : ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಕಾರವಾರ : ಬೊಮ್ಮನಹಳ್ಳಿ, ಕೊಡಸಳ್ಳಿ ಹಾಗೂ ಕದ್ರಾ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿದ್ದು, ಮೂರು ಜಲಾಶಯಗಳಿಂದಲೂ ನೀರು ಬಿಡಲಾಗುವುದು. ಈ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುವುದರಿಂದ ನದಿ ಪಾತ್ರದಲ್ಲಿ ವಾಸಿಸುವ ಜನರು ಎತ್ತರದ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಅವರು ಆದೇಶಿಸಿದ್ದಾರೆ.
ಈಗಾಗಲೇ ಸಮೀಪದ ಶಾಲೆ, ಅಂಗನವಾಡಿ ಮತ್ತು ಇತರಡೆ ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಸ್ಥಳಾಂತರಗೊಂಡು, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೋರಿದ್ದಾರೆ.
ಅಲ್ಲದೇ ಡಂಗೂರ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದ್ದರೂ ಸಹ ಕೆಲವರು ಸ್ಥಳಾಂತರಗೊಂಡಿರುವದಿಲ್ಲ. ಈ ಕೂಡಲೆ ಅಪಾಯದಲ್ಲಿರುವ ಎಲ್ಲರೂ ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕದ್ರಾ ಜಲಾಶಯದಿಂದ 1.4 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದ್ದು, ಕಾರವಾರದ ವರೆಗೆ ನದಿಗಳು ಅಪಾಯ ಮಟ್ಟ ಮೀರಿ ಹರಿಯಲಿವೆ ಎಂದು ಅವರು ತಿಳಿಸಿದ್ದಾರೆ.