32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ರಸ್ತೆ ಸುರಕ್ಷತಾ ನಿಯಮಗಳ ಸಂದೇಶ ಸಾರಿದ ವಾಕ್‍ಥಾನ್

Source: SO News | By Laxmi Tanaya | Published on 21st January 2021, 7:22 PM | State News | Don't Miss |

ಬಳ್ಳಾರಿ : 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ವಾಕ್‍ಥಾನ್ ನಡೆಯಿತು.

ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಿಂದ ಆರಂಭವಾದ ವಾಕ್‍ಥಾನ್ ರಾಯಲ್ ಸರ್ಕಲ್ ಮಾರ್ಗವಾಗಿ ಬೆಂಗಳೂರು ರಸ್ತೆ,ಬ್ರೂಸ್ ಪೇಟೆ ಪೋಲಿಸ್ ಠಾಣೆ ಮಾರ್ಗವಾಗಿ ಎಚ್.ಆರ್.ಗವಿಯಪ್ಪ ವೃತ್ತದವರೆಗೆ ನಡೆಯಿತು. ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸರು ಈ ವಾಕ್‍ಥಾನದಲ್ಲಿ ಭಾಗವಹಿಸಿದ್ದರು. 

ವಾಕ್‍ಥಾನ ಸಂದರ್ಭದಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಫಲಕಗಳು ಹಾಗೂ ಸಂದೇಶಗಳು ಗಮನಸೆಳೆದವು.
ವಾಕ್‍ಥಾನ್ ನಂತರ ಎಚ್.ಆರ್.ಗವಿಯಪ್ಪ ವೃತ್ತದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಮಾತನಾಡಿ,  ಪ್ರತಿಯೊಬ್ಬರ ಜೀವ ಅಮೂಲ್ಯ;ತಮ್ಮ ಹಿಂದೆ ತಮ್ಮನ್ನೇ ನಂಬಿಕೊಂಡ ಕುಟುಂಬವಿದೆ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸದೇ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.

ಬಳ್ಳಾರಿ ನಗರದಲ್ಲಿ ಪ್ರತಿ ವರ್ಷ 1 ಸಾವಿರ ಅಪಘಾತಗಳಾಗುತ್ತಿದ್ದು,ಅವುಗಳಲ್ಲಿ 300 ಜನರು ಸಾವಿಗಿಡಾಗುತ್ತಿದ್ದಾರೆ;ಇದು ದೊಡ್ಡ ದುರಂತ ಎಂದು ಹೇಳಿದ ಬಳ್ಳಾರಿ ಶಾಸಕ ಸೋಮಶೇಖರರೆಡ್ಡಿ ಅವರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಳೆದ ಎರಡು ದಿನಗಳ ಹಿಂದೆ ಸಾರ್ವಜನಿಕರೊಬ್ಬರು ಹೆಲ್ಮೆಟ್ ಹಾಕಿಕೊಳ್ಳದ್ದರಿಂದ ಪೋಲಿಸರು ಹಿಡಿದ ಹಿನ್ನೆಲೆಯಲ್ಲಿ ಫೋನ್ ಮಾಡಿರುವ ವಿಷಯವನ್ನು ಪ್ರಸ್ತಾಪಿಸಿದ ಶಾಸಕ ಸೋಮಶೇಖರರೆಡ್ಡಿ ಅವರು ಹೆಲ್ಮೆಟ್ ಧರಿಸದ ಕಾರಣಕ್ಕೆ ಯಾರ ವಿಷಯದಲ್ಲಾದರೂ ಸ್ವತಃ ನಾನೇ ಫೋನ್ ಮಾಡಿದರೂ ದಂಡ ವಿಧಿಸದೇ ಬಿಡಬೇಡಿ; ಸವಾರರಿಗೆ ತಿಳಿಸಿ ಶಾಸಕರೇ ಹೇಳಿದ್ದಾರೆ ದಂಡ ವಿಧಿಸಲು ಅಂತೇಳಿ ದಂಡ ವಿಧಿಸಿ ಎಂದು ಅವರು ಪೊಲೀಸರಿಗೆ ಹೇಳಿದರು.
ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ನೆರೆದಿದ್ದ ಸರ್ವರಿಗೆ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಪ್ರತಿಜ್ಞಾವಿಧಿಸಿ ಮಾತನಾಡಿದರು.

ರಸ್ತೆ ಸುರಕ್ಷತೆಯಲ್ಲಿ ನಿಷ್ಕಾಳಜಿ ತೋರದೇ ಪ್ರತಿಯೊಬ್ಬರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ ತಮ್ಮ ಅಮೂಲ್ಯ ಜೀವ ಕಾಪಾಡಿಕೊಳ್ಳುವುದರ ಜತೆಗೆ ಇನ್ನೊಬ್ಬರ ಜೀವವೂ ಉಳಿಸಿ ಎಂದರು.

ರಸ್ತೆ ಸುರಕ್ಷತಾ ನಿಯಮಗಳ ಕಡ್ಡಾಯ ಪಾಲನೆಗೆ ಸಂಬಂಧಿಸಿದಂತೆ ಅನೇಕ ಸಲಹೆ ಸೂಚನೆಗಳನ್ನು ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.

ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಅವರು ಮಾತನಾಡಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ರಮೇಶ,ಸತ್ಯನಾರಾಯಣ, ಆರ್‍ಟಿಒ ಶೇಖರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...