ನವದೆಹಲಿ: ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಕಾಂಗ್ರೇಸ್ ಹಿರಿಯ ನಾಯಕಿ ಶೀಲಾ ದೀಕ್ಷಿತ್(೮೧) ಶನಿವಾರ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯಕ್ಕೊಳಗಾಗಿದ್ದ ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಸಂಸದೆ, ಮೂರು ಬಾರಿ ಸಿಎಂ, ಕೇರಳದ ಮಾಜಿ ರಾಜ್ಯಪಾಲೆಯಾಗಿದ್ದ ಶೀಲಾ ದೀಕ್ಷಿತ್ ಅವರನ್ನು ಮತ್ತೊಮ್ಮೆ ಸಕ್ರಿಯ ರಾಜಕೀಯಕ್ಕೆ ಕರೆ ತಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಿಸಲಾಗಿತ್ತು. ಆದರೆ, ಲೋಕಸಭೆ ಚುನಾವಣೆ 2019ರಲ್ಲಿ ಕಾಂಗ್ರೆಸ್ಸಿಗೆ ಬಲ ತುಂಬಲು ಯತ್ನಿಸಲಾಗಿತ್ತು. ಆದರೆ, ಆಮ್ ಆದ್ಮಿ ಪಕ್ಷದ ಜೊತೆಗಿನ ಮೈತ್ರಿ ಭಿನ್ನಾಭಿಪ್ರಾಯದಿಂದ ದೆಹಲಿಯಲ್ಲಿ ಕಾಂಗ್ರೆಸ್ ಎಲ್ಲಾ 7 ಕ್ಷೇತ್ರಗಳಲ್ಲಿ ಸೋಲು ಅನುಭವಿಸಿತ್ತು.
ಶೀಲಾ ದೀಕ್ಷಿತ್ ಅವರು 1984 ಮತ್ತು 1989 ಅವಧಿಯಲ್ಲಿ ಉತ್ತರಪ್ರದೇಶದ ಕನೌಜ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಂತರ 1998 ರಿಂದ 2013ರವರೆಗೆ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆದರೆ, ವಿಧಾನಸಭೆ ಚುನಾವಣೆಯಲ್ಲಿ ಶೀಲಾ ದೀಕ್ಷಿತ್ ಅವರು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಾರಿ ಸೋಲು ಅನುಭವಿಸಿದ್ದರು.
ಶೀಲಾ ದೀಕ್ಷಿತ್ ಅವರ ನಿಧನಕ್ಕೆ ಪ್ರಧಾನಿ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಗಣ್ಯಾತಿಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.