ಕಾರವಾರ : ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಪುರುಷನಿಗೆ ಸರಿಸಮಾನಳಾಗಿ ದುಡಿಯುತ್ತಿದ್ದು, ಮಹಿಳೆಯರಿಗೆ ಹೆಚ್ಚಿನ ಅವಕಾಶಗಳನ್ನು ನೀಡಿ ಪ್ರೋತ್ಸಾಹಿಸಬೇಕಾಗಿದೆ ಹಿರಿಯ ಸಿವಿಲ್ ನ್ಯಾಯಾಶೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಗೋವಿಂದಯ್ಯ ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಆವರಣದಲ್ಲಿರುವ ಸ್ತ್ರೀಶಕ್ತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ಸದೃಡರಾಗದೇ ಹೊರತು ಸದೃಡ ಸಮಾಜ ನಿರ್ಮಾಣ ಮಾಡುವುದು ಅಸಾದ್ಯವಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬರುತ್ತಿದ್ದಾರೆ. ಅವರಿಗೆ ಎಲ್ಲ ಕ್ಷೇತ್ರಗಲ್ಲೂ ಅವಕಾಶಗಳನ್ನು ಮತ್ತು ಜವಾಬ್ದಾರಿಗಳನ್ನು ನೀಡಬೇಕು. ಹೆಣ್ಣು ಮಕ್ಕಳು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲವರಾಗಿದ್ದಾರೆ ಎಂದು ಅಭಿಪ್ರಾಯ ಪಟ್ಟರು.
ಅಪ್ರಾಪ್ತ ಹೆಣ್ಣು ಮಕ್ಕಳ ಮದುವೆಯನ್ನು ಬೇಗ ಮಾಡುವದರಿಂದ ಅನೇಕ ಸಮಸ್ಯೆಗಳು ಉದ್ಬವಿಸುತ್ತವೆ. ಅವಳ ಬಾಲ್ಯ ಕಸಿದುಕೊಳ್ಳುವದರೊಂದಿಗೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತದೆ. ಈ ಹಿನ್ನಲೆಯಲ್ಲಿ ಬಾಲ್ಯ ವಿವಾಹಗಳು ಕಂಡು ಬಂದಲ್ಲಿ ತಡೆ ಹಿಡಿಯಬೇಕು. ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಮಾತನಾಡಿ ಸಮಾಜದಲ್ಲಿ ಹೆಣ್ಣನ್ನು ನಕರಾತ್ಮಕ ದೃಷ್ಠಿಕೋನದಿಂದ ನೋಡದೇ ಸಕರಾತ್ಮಕವಾಗಿ ನೋಡಿ ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದರು.
ನ್ಯಾಯವಾದಿ ರಾಜೇಶ್ವರಿ ವಿ. ನಾಯ್ಕ ವಿಶೇಷ ಉಪನ್ಯಾಸ ನೀಡಿ ಗರ್ಭದಾರಣ ಮತ್ತು ಪ್ರಸವಪೂರ್ವ ಲಿಂಗಪತ್ತೆ ನಿಷೇದ ಕಾಯಿದೆ ಹಾಗೂ ಬೇಟಿ ಬಚಾವೋ ಬೇಟಿ ಪಡಾವೋ ಕುರಿತು ವಿವರಿಸಿದರು.
ಜಿಲ್ಲಾ ಆಸ್ಪತ್ರೆ ಮನೋರೋಗ ತಜ್ಞ ವೈದ್ಯ ಡಾ. ಸರ್ವೇಶಕುಮಾರ ಎಚ್. ಅವರು ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆತಡೆಗಟ್ಟುವಿಕೆ ಕುರಿತು ಪಾವರ್ ಪಯಿಂಟ್ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.