ಕಾರವಾರ: ವಿದ್ಯಾರ್ಥಿ ಜೀವನದಿಂದಲೇ ಶ್ರೇಷ್ಠ ಗುರಿ ಸಾಧನೆಗೆ ಪೂರ್ವ ತಯಾರಿ ಮಾಡಿಕೊಳ್ಳಿ- ಜಿಪಂ ಸಿಇಒ ಈಶ್ವರ ಕಾಂದೂ

Source: S O News | By I.G. Bhatkali | Published on 29th February 2024, 1:29 AM | Coastal News |

ಕಾರವಾರ: ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿ ಅತ್ಯುತ್ತಮ ಸಾಧನೆಯ ಮೂಲಕ ಹೆಸರಾಗಿರುವ ಡಾ. ಎಪಿಜಿ ಅಬ್ದುಲ್ ಕಲಾಂ, ಡಾ. ಬಿ.ಆರ್. ಅಂಬೇಡ್ಕರ್, ಸರ್. ಸಿ.ವಿ. ರಾಮನ್, ಸಚಿನ್ ತೆಂಡೂಲ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳಡಿ ಮಕ್ಕಳು ಶಾಲಾ ಹಂತದಿಂದಲೇ ಶ್ರೇಷ್ಠ ಗುರಿ ಸಾಧನೆಗೆ ಪೂರ್ವ ತಯಾರಿ ಮಾಡಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ  ಹೇಳಿದರು.

ಅವರು  ಇಂದು ಕುಮಟಾದ ಕೊಂಕಣ ಶಿಕ್ಷಣ ಸಂಸ್ಥೆಯಿಂದ ಸಿವಿಎಸ್‍ಕೆ ಹೈಸ್ಕೂಲ್‍ನ ಅಟಲ್ ಟಿಂಕರಿಂಗ್ ಲ್ಯಾಬ್‍ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಎಕ್ಸ್ಪೋ -2024(EXPO-2024)ನಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ನಂತರ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಮಾಡಿ ಪಾಲಕರ ಹಾಗೂ ಶಿಕ್ಷಕರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕು. ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಸಾಧನೆಯ ಮೂಲಕ ಸೂಕ್ತ ಮಾರ್ಗಗಳನ್ನು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಮಕ್ಕಳು ಸಮಾಜದಲ್ಲಿ ಶ್ರೇಷ್ಠ ಸಾಧನೆಗೈದ ಮಹನೀಯರ ಮಾರ್ಗದರ್ಶನ, ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಾಲ್ಯದಿಂದಲೇ ಉತ್ತಮವಾದ ಗುರಿ ಇಟ್ಟುಕೊಂಡು ಆ ಗುರಿ ಸಾಧನೆಗೆ ಪೂರಕವಾಗಿ ವ್ಯವಸ್ಥಿತವಾಗಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಈ ರೀತಿಯಾಗಿ ಮನೋಭಾವದಿಂದ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಿದೆ ಎಂದರು.
ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಎಕ್ಸ್ಪೋ -2024 (Expo-2024) ದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೇರೆಪಿಸಿದರು.

ನಂತರ ಹೊನ್ನಾವರ ತಾಲ್ಲೂಕಿನ ಕರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್‍ಆರ್‍ಎಲ್‍ಎಂ ಯೋಜನೆಯಡಿ ಶ್ರೀದೇವಿ ಸ್ರ್ತೀ ಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ನಡೆಸುತ್ತಿರುವ ರೊಟ್ಟಿ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ರೊಟ್ಟಿ ತಯಾರಿಕೆ ವಿಧಾನ ಹಾಗೂ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದರು. 

ನಂತರ ಕೆಳಗಿನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಣವಂತಿ ಗ್ರಾಮದ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಮಕ್ಕಳ ಕಲಿಕಾ ಪ್ರಕ್ರಿಯೆ ಕುರಿತು ಶಿಕ್ಷಕರು, ಗ್ರಾಮಸ್ಥರು ಹಾಗೂ ಮಕ್ಕಳೊಂದಿಗೆ ಸಮಾಲಾಓಚನೆ ನಡೆಸಿದರು. ಹಾಗೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಮಕ್ಕಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮಕ್ಕಳ ಕಲೆಗೆ ಪ್ರಶಂಸೆ ವ್ಯಕ್ತಪಡಿಸಿದರು. 

ತದನಂತರ ಚಿತ್ತಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ನಡೆಸುತ್ತಿರುವ ಮಧುವನ ಜೇನು ಕೃಷಿ ಘಟಕ್ಕೆ ಭೇಟಿನೀಡಿ ಜೇನು ಕೃಷಿ ಕುರಿತಾದ ಪ್ರಾತ್ಯಕ್ಷಿಕೆ ವೀಕ್ಷಿಸಿ ರೈತರಿಂದ ಅಗತ್ಯ ಮಾಹಿತಿ ಪಡೆದರು. ನಂತರ ಭಟ್ಕಳ ತಾಲ್ಲೂಕಿನ ಬೈಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಜೆಜೆಎಂ ಕಾಮಗಾರಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕು ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರುಗಳು, ಕೊಂಕಣ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು, ಶಿಕ್ಷಕರು, ಪಿಡಿಒ ಗಳು, ಐಇಸಿ ಹಾಗೂ ತಾಂತ್ರಿಕ ಸಂಯೋಜಕರು, ಟಿಪಿಎಂ, ಟಿಎಇ ಗಳು ಉಪಸ್ಥಿತರಿದ್ದರು.

Read These Next