ಕಲಬುರಗಿ:ಅತಿಥಿ ಉಪನ್ಯಾಸಕರು/ಶಿಕ್ಷಕರ ಕಳೆದ ನಾಲ್ಕೈದು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು, ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಮತ್ತು ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ನೇತೃತ್ವದಲ್ಲಿ ಜೂ.25 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಅದೇ ರೀತಿ ಅಂದು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಆರ್ಗನೈಸೇಷನ್ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ ಎಸ್.ಎಚ್.ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ 413 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಜನ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ನೆಟ್, ಸೆಟ್ ಅಥವಾ ಪಿ.ಎಚ್.ಡಿ.ಆಗಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 13000 ರೂ, ಉಳಿದವರಿಗೆ 11,000 ರೂ ಮತ್ತು ಅತಿಥಿ ಶಿಕ್ಷಕರಿಗೆ 7,500 ರೂ. ವೇತನ ನೀಡಲಾಗುತ್ತಿದೆ. ಸರ್ಕಾರ ಕೊಡುವ ಕಡಿಮೆ ಗೌರವಧನದಲ್ಲಿ ಕೆಲಸ ನಿರ್ವಹಿಸುತ್ತಿದ್ದರೂ ಕಳೆದ 4-5 ತಿಂಗಳಿಂದ ವೇತನ ನೀಡದೇ ಇರುವುದರಿಂದ ಅವರ ಬದುಕು ಅತಂತ್ರವಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರು ಮತ್ತಷ್ಟು ಸಮಸ್ಯೆ ಎದುರಿಸುವಂತಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಸಂಬಳ ನಿಲ್ಲಿಸಬಾರದು ಎಂದು ಸರ್ಕಾರವೇ ಹೇಳಿದ್ದರೂ ಮಾರ್ಚ್ 24 ರಿಂದ ಇಲ್ಲಿಯವರೆಗೆ ಸಂಬಳ ನೀಡಿಲ್ಲ. ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಮಳವಳ್ಳಿ ಪದವಿ ಕಾಲೇಜಿನಲ್ಲಿ ಇಬ್ಬರು ಅತಿಥಿ ಉಪನ್ಯಾಸಕರು ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅತಿಥಿ ಉಪನ್ಯಾಸಕರ ಬಾಕಿ ವೇತನ ಬಿಡುಗಡೆ ಮಾಡಬೇಕು, ವಿವಿಧ ಕ್ಷೇತ್ರಗಳಿಗೆ ಪರಿಹಾರ ನೀಡಿರುವಂತೆ ಅತಿಥಿ ಉಪನ್ಯಾಸಕರಿಗೂ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಮತ್ತು ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಎಲ್ಲಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜೂ.25 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಮುಂದೆ ನಡೆಯುವ ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಎಐಡಿವೈಓ ಜಿಲ್ಲಾ ಅಧ್ಯಕ್ಷ ನಿಂಗಣ್ಣ ಎಸ್.ಜಂಬಗಿ, ಅತಿಥಿ ಶಿಕ್ಷಕ ಶಿವಕುಮಾರ ಈ.ಕೆ, ಮಲ್ಲಿನಾಥ ಹುಂಡೇಕಲ್, ಈಶ್ವರ ಈ.ಕೆ, ಶರಣು ವಿ.ಕೆ., ಅಂಬಿಕಾ ಎಸ್.ಜಿ.ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು