ತೋಟಗಾರಿಕೆ ಯೋಜನೆಗಳ ಸಹಾಯಧನ: ರೈತರಿಂದ ಅರ್ಜಿ ಆಹ್ವಾನ
ಕಾರವಾರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಡಿ ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತೆಂಗು, ಮಾವು, ಸಪೋಟ, ಬಾಳೆ, ನುಗ್ಗೆ, ಪಪ್ಪಾಯ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಗಳನ್ನು ಮತ್ತು ಕೊಳವೆ ಬಾವಿ ಮರುಪೂರಣ ಹಾಗೂ ನೀರು ಸಂರಕ್ಷಿತ ಕಾಮಗಾರಿಗಳನ್ನು ರೈತರ ಜಮೀನಿನಲ್ಲಿ ಅನುಷ್ಠಾನಗೊಳಿಸಲು ಹಾಗೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಾಳುಮೆಣಸು, ಗೇರು, ಅನಾನಸ್ ಮತ್ತು ಬಾಳೆ ಬೆಳೆಗಳ ಪ್ರದೇಶ ವಿಸ್ತರಣೆ, ಅನುಮೋದಿತ ಸಸ್ಯ ಸಂರಕ್ಷಣಾ ಔಷಧಿಗಳ ಖರೀದಿಗೆ ಸಹಾಯಧನ, ನೀರು ಸಂಗ್ರಹಣಾ ಘಟಕ ನಿರ್ಮಾಣ, ಜೇನು ಕೃಷಿ, ಕೊಯ್ಲೋತ್ತರ ಸಂಸ್ಕರಣಾ ಘಟಕ, ಸಂರಕ್ಷಿತ ಬೇಸಾಯ ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಕೆ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 31ರೊಳಗಾಗಿ ಆಯಾ ತಾಲೂಕಿನ ತೋಟಗಾರಿಕೆ ಕಛೇರಿಗಳಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಅನುದಾನದ ಲಭ್ಯತೆಯಂತೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತೋಟಗಾರಿಕಾ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.