ಕೋಲಾರ : ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಉನ್ನತ ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅಬಕಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಕೋಲಾರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತವನ್ನು ಗಣಿ ಬಾದಿತ ಗ್ರಾಮಗಳಲ್ಲಿ ವಿನಿಯೋಗಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
15-20 ವರ್ಷಗಳ ಹಿಂದೆ ನಿರ್ಮಿಸಿರುವ ಕೋಲ್ಡ್ ಸ್ಟೋರೆಜ್ನ್ನು ನವೀಕರಿಸಬೇಕು. ಜಿಲ್ಲೆಯಲ್ಲಿ ಅನೇಕ ಜನರು ಕಲ್ಲು ಒಡೆಯುವ ವೃತ್ತಿಯಲ್ಲಿ ತೊಡಗಿಕೊಂಡಿದ್ದು, ಎಲ್ಲರೂ ಬಡವರು ಆಗಿದ್ದಾರೆ . ಅದ್ದರಿಂದ ಅವರಿಗೆ ಕ್ಷೇತ್ರವಾರು ಪರವಾನಗಿ ನೀಡಿದರೆ ಅವರ ಜೀವನೋಪಾಯಕ್ಕೆ ಆಧಾರವಾಗುತ್ತದೆ ಎಂದು ತಿಳಿಸಿದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್ ಮುನಿಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಲ್ಲು ಒಡೆಯುವ ಕೆಲಸದಲ್ಲಿ ತೊಡೆದುಕೊಂಡಿರವರ ಬಗ್ಗೆ ಸರ್ವೆ ಮಾಡಬೇಕು. ಪರವಾನಗಿ ನೀಡುವ ಸಂದರ್ಭದಲ್ಲಿ ಮೊದಲ ಆದ್ಯತೆಯನ್ನು ಜಿಲ್ಲೆಯ ಜನರಿಗೆ ನೀಡಬೇಕು.
ತಮಿಳುನಾಡು ಮತ್ತು ಆಂಧ್ರದಿಂದ ಬಂದು ಅನಧಿಕೃತ ಗ್ರಾನೈಟ್ ಮಾರಾಟ ಮಾಡುತ್ತಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಭೂ ವಿಜ್ಞಾನಿ ಅಧಿಕಾರಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ಮಾತನಾಡಿ ಸರ್ಕಾರದಿಂದ ಕೋವಿಡ್ಗೆ ಫಂಡ್ ಅಂತ ಯಾವುದೇ ವಿಶೇಷ ಅನುದಾನ ಬರುವುದಿಲ್ಲ. ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಕೋವಿಡ್ ನಿರ್ವಹಣೆಗೆ 30 % ಹಣವನ್ನು ಮೀಸಲಿಡಲಾಗಿದೆ. ಜಿಲ್ಲಾಸ್ಪತ್ರೆಗೆ ಕಾಂಪೌಂಡ್ ಅತ್ಯಂತ ಅವಶ್ಯಕವಾಗಿದ್ದು, ಎಂ.ಪಿ. ಮತ್ತು ಎಂ.ಎಲ್.ಎ.ಗಳ ಫಂಡ್ನಲ್ಲಿ ಕಾಂಪೌಂಡ್ ನಿರ್ಮಾಣವಾಗಬೇಕು. ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ವೈದ್ಯರಿದ್ದು, ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸಗೌಡ, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ನಂಜೇಗೌಡ, ಕೆ.ಜಿ.ಎಫ್. ವಿಧಾನಸಭಾ ಕ್ಷೇತ್ರದ ಶಾಸಕ ರೂಪಕಲಾ ಶಶಿಧರ್, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್, ಅಪರ ಜಿಲ್ಲಾಧಿಕಾರಿಗಳಾದ ಸ್ನೇಹಾ, ಸೇರಿದಂತೆ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ