ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆ.ಅಂಬಿಕಾಪತಿ ಅವರ ಸಂಬಂಧಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದು, 42 ಕೋಟಿ ರೂ.ಗೂ ಅಧಿಕ ಮೊತ್ತದ ನಗದು ಪತ್ತೆಯಾಗಿದೆ. ಈ ಸಂಬಂಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಇಲ್ಲಿನ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆತ್ಮಾನಂದ ಲೇಔಟ್ನಲ್ಲಿರುವ ಆರ್. ಅಂಬಿಕಾಪತಿ ಸಂಬಂಧಿ ಪ್ರದೀಪ್ ಎಂಬವರ ನಿವಾಸ ದಲ್ಲಿ 23 ಕಾರ್ಟನ್ ಬಾಕ್ಸ್ಗಳಲ್ಲಿ 500 ರೂ. ಮುಖಬೆಲೆಯ ಒಟ್ಟು 42 ಕೋ. ರೂ, ಪತ್ತೆಯಾಗಿದೆ. ಇದರ ಬೆನ್ನಲ್ಲೇ ಸುಲ್ತಾನ್ ಪಾಳ್ಯ, ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ವಿವಿಧೆಡೆ ಆರ್. ಅಂಬಿಕಾಪತಿ ಸೇರಿದ ನಿವಾಸ, ಕಚೇರಿ ಗಳಲ್ಲಿ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದರು. ಅಂಬಿಕಾಪತಿ ಹಾಗೂ ಬಿಬಿಎಂಪಿ ಮಾಜಿ ಸದಸ್ಯೆ ಅಶ್ವತ್ಥಮ್ಮ ಅವರ ಮನೆ ಮೇಲೆ ಗುರುವಾರ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಪ್ರದೀಪ್ಗೆ ಸೇರಿದ ನಿವಾಸದಲ್ಲಿ ಶುಕ್ರವಾರ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯಕ್ಕೆ ಪತ್ತೆಯಾಗಿರುವ ಕೋಟ್ಯಂತರ ರೂ. ಯಾರಿಗೆ ಸೇರಿದ್ದು, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ವಸತಿ ಗೃಹ ಯಾರ ಒಡೆತನಕ್ಕೆ ಸೇರಿದೆ, ಹಣದ ಮೂಲ ಯಾವುದು, ಎಲ್ಲಿಗೆ ಸಂಗ್ರಹಿಸಲಾಗುತಿತ್ತು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಇಷ್ಟು ದೊಡ್ಡ ಮೊತ್ತದ ಹಣವನ್ನು ಕಾರಿನ ಮೂಲಕ ಚೆನ್ನೈನಿಂದ ತೆಲಂಗಾಣ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಐಟಿ ಅಧಿಕಾರಿಗಳು ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯೆ ಅಶ್ವತ್ಥಮ್ಮ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅದೇ ರೀತಿ, ಬ್ಯಾಂಕ್ ಖಾತೆಗಳು, ಚಿರ-ಚರಾಸ್ತಿಗಳು ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಐಟಿ ದಾಳಿ ನಡೆಸಿದ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆಯಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10ಕ್ಕೂ ಹೆಚ್ಚು ಕಡೆ ಐಟಿ ದಾಳಿ: ತೆರಿಗೆ ವಂಚನೆ ಸಂಬಂಧ ಅ.12ರಂದು ನಗರದ 10ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆಗಳಲ್ಲಿ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ಅವರ ಆರೆಂವಿ ಎಕ್ಸಟೆನ್ಶನ್ನಲ್ಲಿರುವ ನಿವಾಸದ ಮೇಲೆಯೂ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದರು.