ಮರಾಠ ಅಭಿವೃದ್ಧಿ ನಿಮಗದಿಂದ ಸರ್ಕಾರ ಹಿಂದ್ಸರಿಯದಿದ್ದ ಕನ್ನಡ ಪರ ಸಂಘಟನೆಗಳಿಂದ ಜೈಲ್ ಭರೋ ಚಳುವಳಿ
ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮದ ವಿರುದ್ಧದ ಹೋರಾಟ ಚುರುಕುಗೊಂಡಿದ್ದು ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಕೂಡಲೆ ಹಿಂದೆ ಸರಿಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಿ ಜೈಲ್ ಭರೋ ಚಳುವಳಿಯನ್ನು ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಳ್ ನಾಗರಾಜ್ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ. ರಾಜ್ಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಮತ್ತು ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಮಂಜುನಾಥ್ ದೇವ ನೇತೃತ್ವದಲ್ಲಿ ಕರ್ನಾಟಕ-ತಮಿಳುನಾಡು ಗಡಿ ಅತ್ತಿಬೆಲೆಯಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮವನ್ನು ಬಯಸದೇ ಕೊಡಲಾಗಿದ್ದು, ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡಿಗರಿಗೆ ಅನ್ಯಾಯವೆಸಗಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ತಿರುಗೇಟು ನೀಡಿದ ವಾಟಾಳ್, ಅವರ ಹೇಳಿಕೆಗಳಿಗೆ ನಾವು ಉತ್ತರಿಸುವುದಿಲ್ಲ ಎಂದು ತಿಳಿಸಿದರು.
ಕಳೆದ ನಲವತ್ತು ವರ್ಷಗಳಿಂದ ಕನ್ನಡಿಗರ ಮೇಲೆ ಪುಂಡಾಟಿಕೆ ಸವಾರಿ ಮಾಡುತ್ತಿರುವ ಮರಾಠಿಗರಿಗೆ ನಿಗಮ ನೀಡಿರುವುದು ಕನ್ನಡಿಗರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೂಡಲೇ ಹಿಂಪಡೆಯದಿದ್ದರೆ ಜೈಲ್ ಭರೋ ಚಳವಳಿ ಮಾಡುವುದಾಗಿ ಹೇಳಿದರು.
ಸಾ.ರಾ.ಗೋವಿಂದು ಮಾತನಾಡಿ, ಬಸವ ಕಲ್ಯಾಣ ಮತ್ತು ಮಸ್ಕಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲು ಬಿಎಸ್ವೈ ಈ ರೀತಿ ಮಾಡಿದ್ದಾರೆ. ಇದನ್ನು ಇಲ್ಲಿಗೆ ಕೈ ಬಿಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.