ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ಹಾಗೂ ಸಂಘದ ನಿಷ್ಠಾವಂತ ಕಾರ್ಯಕರ್ತ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದ್ದು, ಬುಧವಾರ ಸ್ಪೀಕರ್ ಹುದ್ದೆಗೇರುವುದು ಖಚಿತಗೊಂಡಂತಾಗಿದೆ.
ಕಾಗೇರಿ ಅವರು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.
ಸೋಮವಾರ ತನಕ ಸ್ಪೀಕರ್ ಹುದ್ದೆಗೆ ಕೆ.ಜಿ.ಬೋಪಯ್ಯನವರೇ ಬಿಜೆಪಿ ಅಭ್ಯರ್ಥಿ, ಅವರೇ ಆಯ್ಕೆಯಾಗುವುದು ಖಚಿತ ಎನ್ನಲಾಗಿತ್ತು. ಬೋಪಯ್ಯ ಈ ಹಿಂದೆಯೂ ಬಿಜೆಪಿ ಸರಕಾರದ ಅವಧಿಯಲ್ಲಿ ವಿಧಾನಸಭೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು
ಇದೀಗ ದಿಢೀರನೆ ಬಿಜೆಪಿ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯ ಬದಲಾವಣೆಯಾಗಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಹೊಸ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.