ಒಂದು ವರ್ಷದಲ್ಲಿ 330 ಅಪರಾಧ ಪ್ರಕರಣಗಳು ಹಿಂದಕ್ಕೆ; ಕೋಮು ಉದ್ವಿಗ್ನತೆ ಸೃಷ್ಟಿಸುವ ಆರೋಪಿಗಳಿಗೆ ಸರಕಾರದಿಂದಲೇ ಕ್ಲೀನ್ ಚಿಟ್

Source: The file/ಜಿ.ಮಹಾಂತೇಶ್ | By I.G. Bhatkali | Published on 29th March 2022, 8:17 AM | State News |

ಬೆಂಗಳೂರು: ಧಾರ್ಮಿಕ ಸೌಹಾರ್ದತೆಗೆ ಧಕ್ಕೆ, ಕೋಮು ಸೌಹಾರ್ದವನ್ನು ಹಾಳುಗೆಡವುದು, ಸಾರ್ವಜನಿಕರಲ್ಲಿ ದ್ವೇಷ ಭಾವನೆ ಮೂಡಿಸಿರುವುದು, ಸುಳ್ಳು, ಪ್ರಚೋದಕ ಮತ್ತು ವೀಡಿಯೊ ತುಣುಕುಗಳನ್ನು ಬದಲಿಸಿ ಮುಸ್ಲಿಮ್ ಸಮುದಾಯದ ವಿರುದ್ಧ ಎತ್ತಿಕಟ್ಟುವುದು ಸೇರಿದಂತೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡಿರುವಂತಹ ಗುರುತರ ಆರೋಪ ಮತ್ತು ಹಲವು ಗಂಭೀರ ಅಪರಾಧಗಳನ್ನು ಎಸಗಿರುವುದು ಸಾಬೀತಾಗಿರುವ ಪ್ರಕರಣಗಳೂ ಸೇರಿದಂತೆ ಕಳೆದ ಒಂದು ವರ್ಷದಲ್ಲಿ ಒಟ್ಟು 330 ಪ್ರಕರಣಗಳನ್ನು ಅಭಿಯೋಜನೆಯಿಂದಲೇ ಹಿಂಪಡೆಯಲಾಗಿದೆ.

2013-14ರಿಂದ 2022ರ ಫೆಬ್ರವರಿವರೆಗಿನ ಅವಧಿಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಪ್ರಕರಣಗಳನ್ನು ಹಿಂಪಡೆದಿರುವ ಕುರಿತು the-file.in' ಈ ಕುರಿತು ಆರ್‌ಟಿಐ ಅಡಿಯಲ್ಲಿ 251 ಕ್ಕೂ ಹೆಚ್ಚು ದಾಖಲೆಗಳನ್ನು ಪಡೆದುಕೊಂಡಿದೆ. ವಿಶೇಷವೆಂದರೆ 2019- 2020ರ ಅವಧಿಯಲ್ಲಿ ಹಿಂಪಡೆದಿರುವ ಪ್ರಕರಣಗಳ ಮಾಹಿತಿಯನ್ನಷ್ಟೇ ಒದಗಿಸಿರುವ ಒಳಾಡಳಿತ ಇಲಾಖೆಯು 2021ರಿಂದ 2022ರವರೆಗೆ ಹಿಂಪಡೆದಿರುವ ಪ್ರಕರಣಗಳ ಮಾಹಿತಿ ಒದಗಿಸಿಲ್ಲ.

2013-14ರಿಂದ 2017-18ರವರೆಗೆ 600 ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆದಿದೆ. ಎಸ್ ಡಿಪಿಐ, ಪಿಎಫ್‌ಐ ಸಂಘಟನೆಗಳಿಗೆ ಸೇರಿದ ಯಾರೊಬ್ಬರ ಪ್ರಕರಣವನ್ನು ಹಿಂಪಡೆದಿರುವುದಿಲ್ಲ ಎಂಬುದು ಆರ್‌ಟಿಐ ಅಡಿ ನೀಡಿರುವ ದಾಖಲೆಗಳಿಂದ ಗೊತ್ತಾಗಿದೆ. ಆದರೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ 330 ಪ್ರಕರಣಗಳನ್ನು ಹಿಂಪಡೆದಿದೆ.

ಹೆಚ್ಚಿನ ಪ್ರಕರಣಗಳಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಜಾಗರಣ ವೇದಿಕೆ, ಉತ್ತರ ಕನ್ನಡ ಹಿಂದೂ ಬಳಗ ಕಾರ್ಯಕರ್ತರೇ ಹೆಚ್ಚಿನ ಸಂಖ್ಯೆಯಲ್ಲಿ ಆರೋಪಿಗಳಾಗಿದ್ದಾರೆ. ಕಾವೇರಿ ನೀರಿನ ಗಲಾಟೆ, ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ಹಿಂಪಡೆದಿದ್ದಾರಾದರೂ ಈ ಸಂಖ್ಯೆ ಬೆರಳಣಿಕೆಯಷ್ಟಿವೆ.

ರೈತರ, ನಕ್ಸಲರ, ಕನ್ನಡ ಪರ ಹೋರಾಟಗಾರರ ವಿರುದ್ಧ ಹಿಂದಿನ ಕಾಂಗ್ರೆಸ್ ಸರಕಾರವು ಮೊಕದ್ದಮೆಗಳನ್ನು ಹಿಂಪಡೆದಿತ್ತೇ ವಿನಃ ಕೋಮು ಸೌಹಾರ್ದ ಹಾಳುಗೆಡವಿರುವ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆದಿರಲಿಲ್ಲ. ಆದರೆ ಹಿಂದಿನ ಅವಧಿಯಲ್ಲಿ ಕೋಮು ಮತ್ತು ಧಾರ್ಮಿಕ ಸೌಹಾರ್ದ ಹಾಳುಗೆಡವಿರುವ ಪ್ರಕರಣಗಳನ್ನು ಬಿಜೆಪಿ ಪಕ್ಷವು ಅಧಿಕಾರಕ್ಕೆ ಬರುತ್ತಿದ್ದಂತೆ ಅಭಿಯೋಜನೆಯಿಂದ ಹಿಂಪಡೆದಿರುವುದು ದಾಖಲೆಯಿಂದ ಗೊತ್ತಾಗಿದೆ.

ಅದೇ ರೀತಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ಸರಕಾರದ ಅವಧಿಯಲ್ಲಿಯೂ (2018ರ ಆಗಸ್ಟ್ 7) 98 ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಸಮಾಜೋತ್ಸವ, ಹಿಂದೂ ಹೃದಯ ಸಂಗಮ ಕಾರ್ಯಕ್ರಮದ ಸಂದರ್ಭದಲ್ಲಿ ಕೋಳಿ ಅಂಗಡಿ(ಪುತ್ತೂರು)ಗೆ ನುಗ್ಗಿ, ಕಲ್ಲು ತೂರಾಟ ನಡೆಸಿದ್ದ ಪ್ರಕರಣವೂ ಈ ಪಟ್ಟಿಯಲ್ಲಿತ್ತು.

ಕನ್ಹಯ್ಯಾ ಕುಮಾರ್ ಮತ್ತು ರೋಹಿತ್ ವೇಮುಲ ಪರ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚುತ್ತಿದ್ದ ಸಂದರ್ಭದಲ್ಲಿ ಅವರಿಗೆ ಕೈಗಳಿಂದ ಮತ್ತು ಹೆಲೈಟ್‌ಗಳಿಂದ ಹೊಡೆದು ಹಲ್ಲೆ ಮಾಡಿದ್ದ ಪ್ರಕರಣವನ್ನೂ ಕೈ ಬಿಡಲಾಗಿತ್ತು.

2020ರ ಫೆ.11ರಂದು 47, ಮಾರ್ಚ್ 5ರಂದು 46, ಮೇ 5ರಂದು 125, ಜೂನ್ 18ರಂದು 51, ಆಗಸ್ಟ್ 31ರಂದು 61 ಪ್ರಕರಣಗಳನ್ನು ವಿಚಾರಣೆಯಿಂದ ಹಿಂಪಡೆದಿದೆ. ಈ ಎಲ್ಲಾ ಪ್ರಕರಣಗಳು ಸಿಆರ್‌ಪಿಸಿ ಕಲಂ 321 ಅಡಿಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದವು.

ಮೈಸೂರು, ಉತ್ತರ ಕನ್ನಡ ಜಿಲ್ಲೆ, ಹೊನ್ನಾವರ, ಚಿಕ್ಕಮಗಳೂರು, ಶಿರಸಿ, ಕೊಡಗು, ವಿರಾಜಪೇಟೆ, ಬಾಳೂರು, ಆಲೂರು, ಜಯಪುರ, ಕೊಪ್ಪಳ, ಗಂಗಾವತಿ, ಬಳ್ಳಾರಿ, ಬೆಳಗಾವಿ, ಹೊನ್ನಾಳಿ, ನ್ಯಾಮತಿ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ನಗರ, ಪಟ್ಟಣಗಳಲ್ಲಿ ಕೋಮು ಸೌಹಾರ್ದತೆ ಹಾಳುಗೆಡವಲು ಯತ್ನಿಸಿರುವ ಪ್ರಕರಣಗಳು ದಾಖಲಾಗಿದ್ದವು. ಇಲ್ಲಿನ ಬಹುತೇಕ ಪ್ರಕರಣಗಳಲ್ಲಿ ಆರೋಪಿತರ ವಿರುದ್ಧದ ಅಪರಾಧ ಕೃತ್ಯಗಳು ತನಿಖೆ ವೇಳೆಯಲ್ಲಿ ಸಾಬೀತಾಗಿದ್ದವು. ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತಲ್ಲದೇ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದವು. ಆದರೂ ಅಭಿಯೋಜನೆಯಿಂದ ಹಿಂಪಡೆದಿದೆ.

ಗಂಗಾವತಿ ನಗರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಹಿಂದೂಗಳು ಇಟ್ಬಾಲ್ ಅನ್ಸಾರಿಯವರಿಗೆ ಮತ ಹಾಕಬಾರದು ಎಂದು ಕೋಮು ದ್ವೇಷದ ಭಾವನೆ ತರುವ ಹೇಳಿಕೆ ನೀಡಿ ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತಂದಿರುವ ಅಪರಾಧ ಎಸಗಿರುವ ಚೈತ್ರಾ ಕುಂದಾಪುರ ವಿರುದ್ಧದ ಪ್ರಕರಣವನ್ನೂ 2020ರ ಮೇ5ರಂದು ಅಭಿಯೋಜನೆಯಿಂದ ಹಿಂಪಡೆದಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಬೆಳಗಾವಿ ಶಾಸಕರಾಗಿದ್ದ ಸಂಜಯ್ ಪಾಟೀಲ್ ಅವರು ಟಿಪ್ಪು ಜಯಂತಿ ಹಾಗೂ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳಲಾಗಿದೆ.

ಹಾಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧದ ಪ್ರಕರಣವನ್ನೂ 2020ರ ಮೇ 5ರಂದು ಹಿಂಪಡೆದಿದೆ. 43 ಜನರೊಂದಿಗೆ ಅಕ್ರಮ ಗುಂಪು ಕಟ್ಟಿಕೊಂಡು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಿ ಸಾರ್ವಜನಿಕ ರಸ್ತೆಗಳನ್ನು ಬಂದ್ ಮಾಡಿದ್ದಲ್ಲದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ರೇಣುಕಾಚಾರ್ಯರ ಮೇಲಿತ್ತು.

ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, 50 ಜನ ಬೆಂಬಲಿಗರೊಂದಿಗೆ ಅಕ್ರಮ ಗುಂಪು ಕಟ್ಟಿಕೊಂಡು ಶಾಂತಿಯುತ ಮತದಾನಕ್ಕೆ ಭಂಗ ತಂದಿರುವ ಅಪರಾಧ ಎಸಗಿ ಸಿಆರ್‌ಪಿಸಿ ಕಲಂ 144 ಕಾಯ್ದೆ ಉಲ್ಲಂಘಿಸಿರುವ ಪ್ರಕರಣವನ್ನೂ ಹಿಂಪಡೆಯಲಾಗಿದೆ.

ಪ್ರಕರಣಗಳ ವಿವರ: ಟಿಪ್ಪು ಜಯಂತಿ, ಹನುಮ ಜಯಂತಿ ವೇಳೆಯಲ್ಲಿ ನಡೆದ ಗಲಭೆಗಳು, ಮಸೀದಿಯಿಂದ ಪ್ರಾರ್ಥನೆ ಮುಗಿಸಿಕೊಂಡು ಬರುವಾಗ ನಡೆದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದು, ಬಿಜೆಪಿ ಪಕ್ಷದವರು ಅಕ್ರಮ ಕೂಟ ಕಟ್ಟಿಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿರುವುದು, ಕೆಎಸ್ಸಾರ್ಟಿಸಿ ಬಸ್ ಅಡ್ಡಗಟ್ಟಿ ಸಾರ್ವಜನಿಕ ಸೊತ್ತಿಗೆ ನಷ್ಟ, ಟಿಪ್ಪು ಜಯಂತಿ ಆಚರಿಸಲು ಬಿಡುವುದಿಲ್ಲ ಎಂದು ಫೇಸ್‌ಬುಕ್ ಖಾತೆ ಮೂಲಕ ಬಜರಂಗದಳ ಕಾರ್ಯಕರ್ತರು ಬೆದರಿಕೆ ಒಡ್ಡಿರುವುದು, ಪ್ರಚೋದಿತ ಘೋಷಣೆ ಪ್ರಿಂಟ್ ಮಾಡಿಸಿ ಹಂಚಿರುವುದು, ಪರೇಶ್ ಮೇಸ್ತ ಸಾವಿನ ಸಂದರ್ಭದಲ್ಲಿ ಪ್ರತಿಭಟನೆ ವೇಳೆಯಲ್ಲಿ ನಡೆದ ಹಿಂಸಾಚಾರ, ಮದ್ರಸ ಹಾಗೂ ನಮಾಜು ಮಾಡುವ ಸ್ಥಳದಲ್ಲಿ ಬಟ್ಟೆ ಸುಟ್ಟು ಹಾನಿಪಡಿಸಿರುವುದು ಮತೀಯ ಭಾವನೆಗಳಿಗೆ ಧಕ್ಕೆ, ದುಡಿಯಲು ಬಂದ ಅಸ್ಸಾಂ ಜನರನ್ನು ಹಿಡಿದು ಕೆಳಗೆ ಕೆಡವಿಕೊಂಡು ಹಲ್ಲೆ ಮಾಡಿರುವುದು, ಮುಸ್ಲಿಮ್ ಯುವತಿಯರು ಬುರ್ಖಾ ಧರಿಸಿರುವ ಭಾವಚಿತ್ರವನ್ನು ಫೇಸ್‌ಬುಕ್‌ನಲ್ಲಿ ಹಾಕಿ ಅಶ್ಲೀಲವಾಗಿ ನಿಂದಿಸಿ ಅವಮಾನಿಸಿರುವುದು, ವೀಡಿಯೊ ತುಣುಕನ್ನು ಬದಲಾಯಿಸಿ ಕೋಮು ಪ್ರಚೋದಕ ಸುಳ್ಳು ಮಾಹಿತಿಯನ್ನು ಪತ್ರಕರ್ತರಿಗೆ ನೀಡಿ ಹಿಂದೂ, ಮುಸ್ಲಿಮರ ನಡುವೆ ವೈಮನಸ್ಸು ತಂದಿರುವುದು, ಲವ್ ಜಿಹಾದ್ ಮಾಡಲು ಹಣ ನೀಡಿರುತ್ತಾರೆಂದು ಎಂದು ಆಧಾರರಹಿತ ಹೇಳಿಕೆ

ನೀಡಿ ಕೋಮು ಸೌಹಾರ್ದ ಕದಡಿರುವುದು, ಹಿಂದೂಗಳು ಇಟ್ಬಾಲ್ ಅನ್ಸಾರಿಗೆ ಮತ ಹಾಕಬಾರದು ಎಂದು ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ತಂದಿರುವುದು, ಮಕ್ಕಳನ್ನು ಮತಾಂತರ ಮಾಡಲಾಗುತ್ತಿದೆ ಎಂದು ಚೈತನ್ಯ ಟೆಕ್ನ ಶಾಲೆ ವಿರುದ್ಧ ಆಧಾರರಹಿತ ಆರೋಪ ಮಾಡಿರುವುದು, ಮಸೀದಿಗೆ ಅಳವಡಿಸಿದ್ದ ಗಾಜುಗಳನ್ನು ಹೊಡೆದು ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿರುವ ಪ್ರಕರಣಗಳನ್ನೂ ಅಭಿಯೋಜನೆಯಿಂದ ಹಿಂಪಡೆದಿರುವುದು ಆರ್‌ಟಿಐನಿಂದ ಪಡೆದಿರುವ ದಾಖಲೆಗಳಿಂದ ತಿಳಿದುಬಂದಿದೆ.

ಅಭಿಯೋಜನೆಯಿಂದ ಹಿಂಪಡೆಯುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಸ್ತಾವ ಸಲ್ಲಿಸಿರುವವರ ಪೈಕಿ ಬಿಜೆಪಿ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಪೈಕಿ ಕೆಲವು ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ 4 ತಿಂಗಳಲ್ಲಿ ಒಟ್ಟು 43 ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಪ್ರಸ್ತಾವಗಳು ಸಲ್ಲಿಕೆಯಾಗಿದ್ದವು ಎಂಬ ಅಂಶ ದಾಖಲೆಯಿಂದ ತಿಳಿದು ಬಂದಿದೆ.

ಸಚಿವ ಸಿ.ಟಿ.ರವಿ, ಪ್ರಭು ಬಿ.ಚವ್ಹಾಣ್, ಕೆ.ಜಿ. ಬೋಪಯ್ಯ, ಸುನೀಲ್ ಬಿ. ನಾಯ್ಕ, ಸಿ.ಎಂ. ಉದಾಸಿ, ರೂಪಾಲಿ ನಾಯ್ಕ, ಡಿ. ವೇದವ್ಯಾಸ ಕಾಮತ್, ಕಳಕಪ್ಪ ಜಿ. ಬಂಡಿ, ಅರಗ ಜ್ಞಾನೇಂದ್ರ, ನೆಹರು ಓಲೆಕಾರ, ಹರೀಶ್ ಪೂಂಜಾ, ಎ.ಎಸ್.ಜಯರಾಮ್, ಕರಡಿ ಸಂಗಣ್ಣ ಪರಣ್ಣ ಈಶ್ವರಪ್ಪ ಮುನವಳ್ಳಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಯು.ಬಿ.ಬಣಕಾರ, ಅರವಿಂದ ಚಂದ್ರಕಾಂತ ಬೆಲ್ಲದ ಸೇರಿದಂತೆ ಬಿಜೆಪಿಯ ಹಾಲಿ ಮತ್ತು ಮಾಜಿ ಶಾಸಕರು ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಗೃಹ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...