ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಐದು ಗ್ಯಾರಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಜೂ.2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಹೇಳಿದರು.
ಭರವಸೆ ನೀಡಿರುವ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ. ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತೀರ್ಮಾನ ಮಾಡಲಾಗುವುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಸಂಗ್ರಹ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಸಂಬಂಧ ಸಚಿವರು ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.