ಬೆಂಗಳೂರು: ಆರು ತಿಂಗಳಲ್ಲಿ 27 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

Source: S O News | By I.G. Bhatkali | Published on 17th January 2024, 5:48 PM | State News |

ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಪೊಲೀಸರು 27 ಕೋಟಿ ರೂ. ಮೌಲ್ಯದ 4,484 ಕೆ.ಜಿ ಗಾಂಜಾ ಹಾಗೂ 23 ಕೆಜಿ ರಾಸಾಯನಿಕ ಪದಾರ್ಥಗಳ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪೊಲೀಸ್ ಪ್ರಧಾನ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ   ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ವಶಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು ಫೆಬ್ರವರಿ ಮಾಹೆಯ ಮೊದಲ ವಾರದಲ್ಲಿ ನಾಶಮಾಡಲು ಪೊಲೀಸ್ ಇಲಾಖೆಗೆ ಸರ್ಕಾರ ಪರವಾನಗಿ ನೀಡಿದೆ. ಯುವಕ ಯುವತಿಯರು ಮಾದಕ ವ್ಯಸನಿಗಳಾಗಿ ಅವರ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿರುವುದರಿಂದ ಕರ್ನಾಟಕ ರಾಜ್ಯವನ್ನು ಮಾದಕಮುಕ್ತ ರಾಜ್ಯವನ್ನಾಗಿಸಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಇಂದು ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಕಾನೂನಿನ ಸುವ್ಯವಸ್ಥೆ ಚೆನ್ನಾಗಿರಬೇಕು.  ಕಾನೂನಿನ ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿಯಾಗುತ್ತದೆ.  ಕಾನೂನು ಸುವ್ಯವಸ್ಥೆಗೂ, ಬಂಡವಾಳ ಹೂಡಿಕೆಗೂ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಚೆನ್ನಾಗಿರುವ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಜಾಸ್ತಿಯಾಗುತ್ತದೆ. ಇದರಿಂದ ಆರ್ಥಿಕ ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಯಾಗುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದೇನೆ.

ಸಮಾಜದಲ್ಲಿ ದುರ್ಬಲ ವರ್ಗದವರಿಗೆ, ಮಹಿಳೆಯರಿಗೆ, ಪರಿಶಿಷ್ಠ ಜಾತಿ-ಪರಿಶಿಷ್ಠ ವರ್ಗದವರಿಗೆ, ಮನೆಗಳಲ್ಲಿ ಒಂಟಿಯಾಗಿ ವಾಸಿಸುವ ಜನರಿಗೆ ರಕ್ಷಣೆ ನೀಡಬೇಕು. ಅದಕ್ಕೋಸ್ಕರ ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಠಾಣೆಯಲ್ಲಿ ಏನು ನಡೆಯುತ್ತಿದೆ ಎಂದು ಪರಿಶೀಲಿಸಿ, ಮಾರ್ಗದರ್ಶನ ನೀಡಲು ಸೂಚಿಸಲಾಗಿತ್ತು, ಈ ದಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ಮಾಡಿದ್ದಾರೆ ಎಂದರು.

ಕಾನೂನು ಸುವ್ಯವಸ್ಥೆ ಕರ್ನಾಟಕದಲ್ಲಿ ಸಮಾಧಾನಕರವಾಗಿದೆ. ಇಲ್ಲಿಯವರೆಗೆ ಯಾವುದೇ ಕೋಮು ಗಲಭೆಗಳು ನಡೆದಿಲ್ಲ. ಕೋಮು ಗಲಭೆಗಳು ಸಣ್ಣ ಪುಟ್ಟದ್ದಾಗಿದ್ದರು, ದೊಡ್ಡ ಪ್ರಮಾಣದಲ್ಲಿ  ಆಗಿಲ್ಲ. ಸೈಬರ್ ಕ್ರೈಮ್‍ಗಳು ಹೆಚ್ಚಾಗುತ್ತಿದ್ದು ಎಲ್ಲಾ ಪೊಲೀಸ್ ಠಾಣೆಗಳು ಹೆಚ್ಚಿನ ಗಮನ ನೀಡುವಂತೆ ಹಾಗೂ  ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಅಪರಾಧ ಪ್ರಮಾಣ ಕಡಿಮೆ ಮಾಡಬೇಕು ಎಂದು ಸೂಚಿಸಲಾಗಿದೆ.

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಜನರಿಗೆ ಪೊಲೀಸರು ಹಾಗೂ ಪೊಲೀಸ್ ಇಲಾಖೆಯ ಮೇಲೆ ನಂಬಿಕೆ, ವಿಶ್ವಾಸ ಬರುವಂತೆ ಕೆಲಸಮಾಡಬೇಕು. ಎಫ್‍ಐಆರ್ ಆದ ಮೇಲೆ ಗುಣಮಟ್ಟದ ತನಿಖೆ ಆಗಬೇಕು.

ಗುಣಮಟ್ಟದ ತನಿಖೆ ಆದರೆ ಹೆಚ್ಚಿನ ಶಿಕ್ಷೆ ಆಗುತ್ತದೆ. ಶಿಕ್ಷೆ ಹೆಚ್ಚಾದರೆ ಅಪರಾಧದ ಪ್ರಕರಣಗಳು ಕಡಿಮೆಯಾಗುತ್ತದೆ. ಲೋಪ-ದೋಷಗಳನ್ನು ಸರಿಪಡಿಸುವ ಕೆಲಸ ಮಾಡಬೇಕು.  ಯಾರೂ ಕೂಡ ಭಯದ ವಾತಾವರಣದಲ್ಲಿ ಇರಬಾರದು. 
 
ಎಲ್ಲಾ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳೊಳಗೆ ಚಾರ್ಜ್ ಶೀಟ್ ಫೈಲ್ ಮಾಡಬೇಕು.  ಪೊಲೀಸ್ ಬೀಟ್ ಹೆಚ್ಚು ಮಾಡಬೇಕು. ಹೊಯ್ಸಳ ಕೂಡ ಮೇಲ್ವಿಚಾರಣೆ ಮಾಡಬೇಕು. ಹಗಲು ರಾತ್ರಿ ನಡೆಯುವ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ ತಡೆಗಟ್ಟಬೇಕು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ರೌಡಿಸಂ ಮಾಡುವವರನ್ನು ಗುರುತಿಸಿ ಅವರ ಮೇಲೆ ನಿಗಾ ಇಟ್ಟು  ಕ್ರಿಮಿನಲ್ ಚಟುವಟಿಕೆ ನಡೆಯದ ರೀತಿ ಎಚ್ಚರವಹಿಸಬೇಕು ಎಂದರು.

  ಈ ವರ್ಷ ಸುವರ್ಣ ಮಹೋತ್ಸವ ಆಚರಿಸುತ್ತಿರುವುದರಿಂದ ಎಲ್ಲಾ ಪೊಲೀಸರಿಗೂ ಬೆಳ್ಳಿ ಪದಕ ನೀಡಲಾಗುವುದು. ವೈದ್ಯಕೀಯ ತಪಾಸಣಾ ಭತ್ಯೆಯನ್ನು 1 ಸಾವಿರ ರೂ.ಗಳಿಂದ 1,500 ರೂಗಳಿಗೆ ಹೆಚ್ಚಿಸಲಾಗಿದೆ.  ಸುವರ್ಣ ಭವನನ್ನು ನಿರ್ಮಿಸಲಾಗುವುದು ಎಂದರು.  

ಪತ್ರಿಕಾ ಗೋಷ್ಠಿಯಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೆÇಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...