ಬಿಜೆಪಿ ಶಾಸಕ ಮಾಡಾಳ್ ಪುತ್ರ ಪ್ರಶಾಂತ್ 'ಲಂಚ' ಪ್ರಕರಣ; ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಪಟು; ಸೂಟ್ಕೇಸ್ ಹಿಡಿದು ಪ್ರತಿಭಟನೆ: ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿ ಹಲವರು ಪೊಲೀಸ್ ವಶಕ್ಕೆ
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲ೦ಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ಸಂಬಂಧ ಶಾಸಕನನ್ನು ಬಂಧಿಸುವುದರ ಜೊತೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.
ಶನಿವಾರ ನಗರದ ಆನಂದ್ ರಾವ್ ವೃತ್ತದಲ್ಲಿನ ಕಾಂಗ್ರೆಸ್ ಭವನದ ಮುಂಭಾಗ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್, ಶಾಸಕರಾದ ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ನಾಯಕರು, ಸೂಟ್ಕೇಸ್ ತುಂಬ ನಕಲಿ ನೋಟುಗಳನ್ನು ಇಟ್ಟು ಪ್ರತಿಭಟಿಸಿದರು.
ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ; ಯಡಿಯೂರಪ್ಪ 'ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ' ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಲೋಕಾಯುಕ್ತ ದಾಳಿ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣದಲ್ಲಿ ಯಾರೂ ಮಧ್ಯಪ್ರವೇಶ ಮಾಡಲು ಅವಕಾಶವಿಲ್ಲ. ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ ಎಂದು ಸ್ವತಃ ಮುಖ್ಯಮಂತ್ರಿ ಸ್ಪಷ್ಟಪಡಿಸಿದ ಬಳಿಕ ನಾನು ಮಾತನಾಡುವುದು ಸಲ್ಲ' ಎಂದರು. ಈ ಪ್ರಕರಣ ಖಂಡಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ. ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುವ ನೈತಿಕತೆ ಕಾಂಗ್ರೆಸ್ ಮುಖಂಡರಿಗೆ ಇಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು. |
ನಂತರ, ಬಿಜೆಪಿಯ 'ರೋಲ್ ಕಾಲ್ ಮಾಡೆಲ್' ವಿರೂಪಾಕ್ಷಪ್ಪ ಎಂದು ಬರೆದಿರುವ ಪೊಸ್ಟರ್ ಅನ್ನು ಅಂಟಿಸಿ, ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸುರ್ಜೆವಾಲಾ, 'ರಾಜ್ಯದ ಬಿಜೆಪಿ ಸರಕಾರವು ಗುತ್ತಿಗೆದಾರರಿಂದ ಶೇ.40ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ನಾವು ಆರಂಭದಿಂದಲೂ ಹೇಳುತ್ತಿದ್ದೆವು. ಅದು ಈಗ ಬಯಲಾಗಿದೆ. ಈ ಕೂಡಲೇ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು.
ಬಿಜೆಪಿ ಅಂದರೆ ಭ್ರಷ್ಟಾಚಾರದ ಪಾರ್ಟಿ, ಪ್ರತೀ ಕೆಲಸಕ್ಕೂ ಕಮಿಷನ್ ಪಡೆಯಲಾಗುತ್ತಿದೆ' ಎಂದು ವಾಗ್ದಾಳಿ ನಡೆಸಿದರು. ಈಗಾಗಲೇ ಮುಖ್ಯಮಂತ್ರಿಯನ್ನು ಪೇ ಸಿಎಂ ಎಂದು ಕರೆಯುತ್ತಾರೆ. ಈ ಮಾತನ್ನು ನಾವು ಮಾತ್ರ ಹೇಳುತ್ತಿಲ್ಲ. ರಾಜ್ಯ ಗುತ್ತಿಗೆದಾರರ ಸಂಘ ಪ್ರಧಾನ ಮಂತ್ರಿಗೆ ಪತ್ರ ಬರೆದು ಉಲ್ಲೇಖಿಸಿದ್ದಾರೆ. ನಾಲ್ಕು ದಿನಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ಪ್ರಧಾನಿ ಮೋದಿ ಅವರು ಬೆಳಗಾವಿಗೆ ಭೇಟಿ ನೀಡಿದ್ದರು. ಆದರೆ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಲಿಲ್ಲ. ಬಿಜೆಪಿ ತನ್ನದೇ ಕಾರ್ಯಕರ್ತನನ್ನು ಬಿಡಲಿಲ್ಲ, ಇನ್ನೂ ಬೇರೆಯವರನ್ನು ಬಿಡುತ್ತದಾ ಎಂದು ಪ್ರಶ್ನೆ ಮಾಡಿದರು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡಿಸಿ ತಪ್ಪಿ ತಸ್ಥರನ್ನು ಜೈಲಿಗೆ ಕಳುಹಿಸುವ ಸಂಕಲ್ಪ ಮಾಡಿದ್ದೇವೆ. ಈ ಅಕ್ರಮದಲ್ಲಿ ಯಾರೇ ತಪ್ಪಿ ತಸ್ಥರಾದರೂ ಅವರ ವಿರುದ್ಧ ತನಿಖೆ ಮಾಡಿ ಅವರಿಗೆ ಶಿಕ್ಷೆ ನೀಡಿಸಲಾಗುವುದು. ರಾಜ್ಯದ ಯುವಕರ ಭವಿಷ್ಯ ನಾಶವಾಗಲು ಬಿಡಬಾರದು ಎಂದು ಅವರು ಹೇಳಿದರು.