ಬೆಂಗಳೂರು: ನಮ್ಮದು ನುಡಿದಂತೆ ನಡೆಯುವ ಸರಕಾರ, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದೂ ಗ್ಯಾರಂಟಿ (ಭರವಸೆ)ಗಳನ್ನು ಈಡೇರಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಶನಿವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಿಕ್ಕಿರಿದ ಸುದ್ದಿಗೋಷ್ಠಿಯಲ್ಲಿ ಅವರು ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ತಿಳಿಸಿದರು.
ಜುಲೈನಲ್ಲಿ ಬಜೆಟ್ ಅಧಿವೇಶನ |
ಈ ಹಿಂದೆ 2013ರಿಂದ 18ರ ವರೆಗಿನ ಅವಧಿಯಲ್ಲಿ ನಮ್ಮ ಕಾಂಗ್ರೆಸ್ ಸರಕಾರವು, ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿತ್ತು. ಅಲ್ಲದೆ, ಇಂದಿರಾ ಕ್ಯಾಂಟೀನ್, ಪಶು ಭಾಗ್ಯ, ಸಾಲಮನ್ನಾ, ವಿದ್ಯಾಸಿರಿ, ಶೂ ಭಾಗ್ಯ ಸೇರಿದಂತೆ 30 ಹೊಸ ಕಾರ್ಯಕ್ರಮಗಳನ್ನು ನೀಡಿದ್ದೆವು ಎಂದು ಅವರು ಹೇಳಿದರು.
ನಮ್ಮ ಗ್ಯಾರಂಟಿಗಳು: 'ಗೃಹ ಜ್ಯೋತಿ' ಯೋಜನೆಯಡಿ ಪ್ರತೀ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲು ಸುಮಾರು 1,200 ಕೋಟಿ ರೂ.ಗಳ ಅಗತ್ಯವಿದೆ. 'ಗೃಹ ಲಕ್ಕಿ ಯೋಜನೆಯಡಿ ಮನೆ ಯಜಮಾನಿಗೆ 93 ಪ್ರತೀ ತಿಂಗಳು 2 ಸಾವಿರ ರೂ., ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತೀ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
`ಯುವ ನಿಧಿ ನಿರುದ್ಯೋಗ ಭತ್ತೆ ಯೋಜನೆಯಡಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ ಡಿ ಪಡೆದಂತಹ ಮೊದಲ ಎರಡು ವರ್ಷಗಳ ಅವಧಿಯೊಳಗೆ ಸರಕಾರಿ ಅಥವಾ ಖಾಸಗಿ ಉದ್ಯೋಗ ದೊರೆಯುವ ತನಕ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಶಿಕ್ಷಣ ಪಡೆದವರಿಗೆ ಮಾಸಿಕ 1,500 ರೂ.ನಿರುದ್ಯೋಗ ಭತ್ತೆಯನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡುತ್ತೇವೆ. ಈ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ, ರಾಜ್ಯ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. ಅಲ್ಲದೆ, ಸರಕಾರಿ ಆದೇಶಗಳನ್ನು ಹೊರಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಅಂಕಿ-ಅಂಶಗಳ ನಿಖರ ಮಾಹಿತಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಮುಂದಿನ ವಾರ ನಡೆಯಲಿರುವ ಸಚಿವ ಸಂಪುಟದ ವೇಳೆಗೆ ಈ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು. ಕಾಂಗ್ರೆಸ್ ಪಕ್ಷ ನೀಡಿರುವ ಈ ಭರವಸೆಗಳು ಒಂದೇ ವರ್ಷದಲ್ಲಿ ಈಡೇರಿಸಲು ಸಾಧ್ಯವಿಲ್ಲ. ನಮ್ಮ ಅಧಿಕಾರಾವಧಿ ಮುಗಿಯುವ ಒಳಗಾಗಿ ಈಡೇರಿಸುತ್ತೇವೆ. ಅಲ್ಲದೆ, ಸ್ಥಗಿತಗೊಂಡಿರುವ ಇಂದಿರಾ ಕ್ಯಾಂಟೀನ್ಗಳನ್ನು ಶೀಘ್ರದಲ್ಲೇ ಪುನರಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ನುಡಿದರು. ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ನೂತನ ಸಚಿವರು ಹಾಜರಿದ್ದರು.