ಬೆಂಗಳೂರು: ಜಲ ಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿ ಹಲವು ಇಲಾಖೆಗಳಲ್ಲಿ ಬಾಕಿ ಉಳಿದಿರುವ ಬಿಲ್ಗಳಿಗೆ ತಿಂಗಳೊಳಗೆ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಶುಕ್ರವಾರ ಚಾಮರಾಜಪೇಟೆಯ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ವಿವಿಧ ಇಲಾಖೆಗಳಿಂದ ಅಂದಾಜು 20 ಸಾವಿರ ಕೋಟಿ ರೂ. ಅಧಿಕ ಮೊತ್ತದ ಬಿಲ್ಗಳು ಬಾಕಿ ಇವೆ.
ಇವುಗಳ ವಿಲೇವಾರಿಗೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮೂರು ಬಾರಿ ಭೇಟಿ ಮಾಡಿ ನಮ್ಮ ಸಂಕಷ್ಟ ಕುರಿತು ಮನವರಿಕೆ ಮಾಡಿಕೊಡಲಾಗಿತ್ತು. ಆದರೂ, ಬಗೆಹರಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದರೂ ಗುತ್ತಿಗೆದಾರರ ಸಮಸ್ಯೆಗಳ ಬಗೆಹರಿಯುವ ಬದಲಾಗಿ ಹೊಸದಾಗಿ ಇನ್ನಷ್ಟು ಸಮಸ್ಯೆಗಳು ಸೃಷ್ಟಿಯಾಗಿವೆ. ಮುಂದಿನ ವಾರದಲ್ಲಿ ಮತ್ತೊಮ್ಮೆ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಇನ್ನಷ್ಟು ಒತ್ತಡ ಹಾಕುತ್ತೇವೆ. ಕೊಟ್ಟಿರುವ ಗಡುವುನೊಳಗೆ ಶೇ.50 ಹಣವನ್ನು ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಬಾಕಿ ಬಿಲ್, ಜಿಎಸ್ಟಿ ಗೊಂದಲ ಸೇರಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಹೊಸ ಸರಕಾರ ರಚನೆಯಾದಾಗ ಗುತ್ತಿಗೆದಾರರಿಗೆ ಹಂತ ಹಂತವಾಗಿ ಬಾಕಿ ಮೊತ್ತವನ್ನು ಬಿಡುಗಡೆ ಮಾಡುವ ಬಗ್ಗೆ ನಿರೀಕ್ಷೆ ಇತ್ತು. ಆದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ತನಿಖೆ ಹೆಸರಿನಲ್ಲಿ ಹಣ ಪಾವತಿಯಾಗದಂತೆ ತಡೆ ಹಿಡಿಯಲಾಗಿದೆ. ಸರ್ಕಾರವೇ ಮಾಡಿರುವ ನಿಯಮಗಳ ಪ್ರಕಾರ ಕಾಮಗಾರಿಗಳಿಗೆ ವರ್ಷದ ಒಪ್ಪಂದ ಮಾತ್ರ ಇರುತ್ತದೆ. ಆದರೆ, ಮೂರು ವರ್ಷದ ತನಿಖೆ ನಡೆಸುವುದಾಗಿ ಹೇಳುತ್ತಿದೆ. ವರ್ಷದಿಂದೀಚೆಗಿನ ಕಾಮಗಾರಿಗಳ ಬಾಕಿ ಮೊತ್ತವನ್ನು ತಡೆ ಹಿಡಿದು ತನಿಖೆ ಮುಗಿದ ನಂತರವೇ ನೀಡಲು ಅಭ್ಯಂತರವಿಲ್ಲ. ಆದರೆ, ಮೂರು, ನಾಲ್ಕು ವರ್ಷಗಳ ಬಾಕಿ ಬಿಲ್ ತಡೆ ಹಿಡಿದಿರುವುದು ಸರಿಯಲ್ಲ ಎಂದರು.
ಮತ್ತೊಂದೆಡೆ, ಬಿಬಿಎಂಪಿಯಲ್ಲಿ ಗುತ್ತಿಗೆದಾರರು ಅನಾಥ ಮಕ್ಕಳಾಗಿದ್ದಾರೆ. ಬೃಹತ್ ನೀರುಗಾಲುವೆ (ಕೆ-100 ಯೋಜನೆ ಸಹಿತ) ಕಾಮಗಾರಿಗಳಿಗೆ ಶೇ.30, ಮೇಲ್ಲೇತುವೆ, ಅಂಡರ್ ಪಾಸ್, ರೈಲು ಮೇಲ್ವೇತುವೆ, ಕೆಳಸೇತುವೆ ಶೇ.10, ಪಾದಚಾರಿ ಮಾರ್ಗ, ಟೆಂಡರ್ ಶೂರ್ ರಸ್ತೆಗಳು ಸೇರಿ ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳು ಶೇ.30, ವೈಟ್ ಟಾಪಿಂಗ್ ಮತ್ತು ಕಟ್ಟಡಗಳು ಶೇ.15, ವಾರ್ಡ್ ಕಾಮಗಾರಿಗಳಿಗೆ ಶೇ.15ರಷ್ಟು ಹಣ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಜೇಷ್ಠತೆ ಆಧಾರದಲ್ಲಿ ಹಣ ಬಿಡುಗಡೆ ಮಾಡುವುದನ್ನು ಕೈ ಬಿಡಲಾಗಿದೆ ಎಂದು ಕೆಂಪಣ್ಣ ಹೇಳಿದರು.