ಮಂಗಳೂರು: ಮಂಗಳೂರಿನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವವರನ್ನು ಮತ್ತು ಅನೈತಿಕ ಪೊಲೀಸ್ ಗಿರಿ ಪ್ರಕರಣಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭಗೊಂಡಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ನಗರ ಅಪರಾಧ ವಿಭಾಗ(ಸಿಸಿಬಿ) ಸಹಾಯಕ ಪೊಲೀಸ್ ಆಯುಕ್ತರಿಗೆ ಇದರ ಉಸ್ತುವಾರಿಯನ್ನು ನೀಡಲಾಗಿದೆ. ಸದ್ಯ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಮುಖ್ಯಸ್ಥರಾಗಿತ್ತಾರೆ. ಈ ತಂಡದಲ್ಲಿ ಆರು ಮಂದಿ ಸಿಬ್ಬಂದಿ ಇರಲಿದ್ದಾರೆ ಎಂದು ಅವರು ಹೇಳಿದರು.
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳನ್ನು ಹಾಗೂ ಕೋಮು ಗಲಭೆಗಳನ್ನು ತಡೆಗಟ್ಟುವ ಸಲುವಾಗಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ನಿಭಾಯಿಸುವುದು ಆಂಟಿ ಕಮ್ಯುನಲ್ ವಿಂಗ್ನ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.
ಈಗಾಗಲೇ ನಗರದಲ್ಲಿ ನಡೆದಿರುವ ಕೋಮು ಗಲಭೆ, ಕೋಮುದ್ವೇಷದ ಭಾಷಣ, ಜಾನುವಾರು ಸಾಗಾಟ ಪ್ರಕರಣ, ಅನೈತಿಕ ಪೊಲೀಸ್ ಗಿರಿ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಗಳಾಗಿ ಗುರುತಿಸಿಕೊಂಡವರ ಮೇಲೆ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ಎಸಿಡಬ್ಲ್ಯು ನಿಗಾವಹಿಸಲಿದೆ ಎಂದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ಅನೈತಿಕ ಪೊಲೀಸ್ ಗಿರಿ, ಕೊಲೆ, ಹಲ್ಲೆ, ಜಾನುವಾರು ವಿಚಾರ ಸೇರಿದಂತೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 200 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.
ಕಳೆದ ಹತ್ತು ವರ್ಷಗಳಲ್ಲಿ ನಗರದಲ್ಲಿ ನಡೆದಿರುವ ಕಮ್ಯುನಲ್ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಎಲ್ಲ ಪ್ರಕರಣಗಳ ಬಗ್ಗೆ ಅಧ್ಯಯನ ಮಾಡಲಾಗಿದೆ. ಇದರಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ನಿಗಾ ಇರಿಸಲಾಗಿದೆ. ಆರೋಪಿಗಳ ಚಲನವಲನಗಳ ಬಗ್ಗೆ ಗಮನವಿರಿಸಲಾಗಿದೆ ಎಂದು ಹೇಳಿದರು.
ಕಾರ್ಯಾಚರಣೆ ಹೇಗೆ?: ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಯಾವುದೇ ಪ್ರಕರಣ ನಡೆದ ತಕ್ಷಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ. ಇದರ ಜೊತೆಗೆ ಎಸಿಡಬ್ಲ್ಯು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿ ಮುಂದಿನ ಕಾರ್ಯಾಚರಣೆ ನಡೆಸಲಿದೆ. ಸಿಎಸ್ಬಿ ನಿರೀಕ್ಷಕರು ತಂಡವನ್ನು ಮುನ್ನಡೆಸಲಿದ್ದಾರೆ. ಈ ತಂಡ ಸಿಸಿಬಿ, ಎಸಿಪಿ ಮತ್ತು ಆಯುಕ್ತರಿಗೆ ವರದಿ ಮಾಡಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಿದೆ. ಅಲ್ಲದೆ ಎಸಿಡಬ್ಲ್ಯು ಮಾಹಿತಿ ಕಲೆಹಾಕಿ ಕಮ್ಯುನಲ್ ಪ್ರಕರಣಗಳು ನಡೆಯುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಿದೆ ಎಂದರು.
ಎಸಿಡಬ್ಲ್ಯುನಲ್ಲಿ ಯಾರೆಲ್ಲಾ ಇರುತ್ತಾರೆ?: ನಗರದ ಅಪರಾಧ ವಿಭಾಗದ (ಸಿಸಿಐ) ಸಹಾಯಕ ಪೊಲೀಸ್ ಆಯುಕ್ತರು ಈ ತಂಡದ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಲಿರುವ ಆ್ಯಂಟಿ ಕಮ್ಯುನಲ್ ವಿಂಗ್ನಲ್ಲಿ ಮಂಗಳೂರು ನಗರದ ವಿಶೇಷ ಘಟಕದ(ಸಿಎಸ್ಬಿ) ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಸದಸ್ಯರಾಗಿರುತ್ತಾರೆ. ಇವರು ನಗರದಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಪ್ರಕರಣಗಳ ಕುರಿತು ಕಾಲಕಾಲಕ್ಕೆ ವಿಶ್ಲೇಷಣೆ ಮಾಡಿ ಆರೋಪಿಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಗಮನ ಹರಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.