ಒಮೈಕ್ರಾನ್ ನಿಯಂತ್ರಣಕ್ಕೆ ಕರ್ನಾಟಕ ಸರಕಾರ ಸನ್ನದ್ಧ: ಸಿಎಂ ಬಸವರಾಜ ಬೊಮ್ಮಾಯಿ
ಬೀದರ್: 'ಕೋವಿಡ್ ರೂಪಾಂತರಿ ತಳಿ ಒಮೈಕ್ರಾನ್ ನಿಯಂತ್ರಣಕ್ಕೆ ರಾಜ್ಯ ಸರಕಾರ ಸರ್ವ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೋಮವಾರ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಮೈಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ತಜ್ಞರ ಮಾರ್ಗಸೂಚಿಯಂತೆ ಕ್ರಮ ವಹಿಸಲಾಗಿದೆ. ಕ್ಲಸ್ಟರ್ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕೋವಿಡ್ ಸೋಂಕು ತಡೆಗಟ್ಟಲು ಕ್ರಮ ವಹಿಸಲಾಗಿದೆ ಎಂದರು.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾಲೆಯ ವಿದ್ಯಾರ್ಥಿಗಳಲ್ಲಿ ಹಾಗೂ ಆನೇಕಲ್ ಸಮೀಪದ ವಸತಿ ಶಾಲೆಯಲ್ಲಿಯೂ ಸೋಂಕಿತರು ಪತ್ತೆಯಾಗಿದ್ದು, ಎರಡು ಕಡೆಗಳಲ್ಲಿ ಕ್ಲಸ್ಟರ್ ಆಗಿದ್ದು, ಅವರ ಸಂಪರ್ಕಿತರ ಪತ್ತೆ ಹಾಗೂ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ಕಾಲ-ಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ 25 ಸ್ಥಾನಗಳಿಗೆ ಡಿ.10ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳು, ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.