ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ 3 ಶಿಕ್ಷಣ ನೀತಿ(ಎನ್ಇಪಿ) ಮತ್ತು ಕೃಷಿ ಕಾಯ್ದೆಗಳ ಜೊತೆಗೆ ಬಿಜೆಪಿ ಸರಕಾರ ಜಾರಿಗೆ ತಂದ ಎಲ್ಲ ಜನವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದೆ.
ಮಂಗಳವಾರನಗರದಖಾಸಗಿಹೊಟೇಲ್ನಲ್ಲಿನಡೆದಪತ್ರಿಕಾ ಗೋಷ್ಠಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಸರ್ವ ಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಬಿಜೆಪಿ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ರೈತರ ವಿರುದ್ಧ ದಾಖಲಾಗಿರುವ ರಾಜಕೀಯ ಪ್ರೇರಿತ ಎಲ್ಲ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗುವುದು. ಜತೆಗೆ ಅವೈಜ್ಞಾನಿಕವಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಪಡಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆ ನೀಡಿದೆ.
ಜಾತಿ, ಮತಗಳ ನಡುವೆ ದ್ವೇಷ ಬಿತ್ತುವ ಸಂಘಟನೆ ಹಾಗೂ ವ್ಯಕ್ತಿಗಳ ವಿರುದ್ಧ ಕ್ರಮ ಕೈ ಗೊಳ್ಳಲಾಗುವುದಲ್ಲದೆ ಅಂತಹ ಸಂಘಟನೆಗಳ ವಿರುದ್ಧ ನಿಷೇಧ ಸೇರಿದಂತೆ ಬಲವಾದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅದು ಪ್ರಣಾಳಿಕೆಯಲ್ಲಿ ತಿಳಿಸಿದೆ. ಮೊದಲ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿ ಮಂಡನೆ, ಒಂದು ವರ್ಷದಲ್ಲಿ ಖಾಲಿ ಇರುವ ಸರಕಾರಿ ಅನುಮೋದಿತ ಹುದ್ದೆಗಳ ಭರ್ತಿ, ಆರೋಗ್ಯ ಇಲಾಖೆಗಳಲ್ಲಿ 15-20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವ ಪ್ರಕ್ರಿಯೆ, ಐದು ವರ್ಷಗಳಲ್ಲಿ ಮೇಕೆದಾಟು ಮಹಾದಾಯಿ ಯೋಜನೆ ಪೂರ್ಣ, ಆಶಾ ಕಾರ್ಯಕರ್ತೆಯರಿಗೆ ಮಾಸಿಕ ನಿಶ್ಚಿತ ಗೌರವಧನ 5,000 ರೂ. ನಿಂದ 8,000 ರೂ. ಗೆ ಹೆಚ್ಚಳ ಸೇರಿದಂತೆ ಹಲವು ಮಹತ್ವದ ಭರವಸೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿದೆ.
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 'ಕಾಂಗ್ರೆಸ್ ಪಕ್ಷವು ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಮತ್ತು ಎಲ್ಲ ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಎಂಬ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆ. ಇವುಗಳಿಗೆ ನಾನು ಗ್ಯಾರಂಟಿ ಕೊಡುತ್ತೇನೆ. ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲೇ ಇವುಗಳ ಜಾರಿಗೆ ತರುತ್ತೇವೆ ಎಂದರು.
ನಾವು ಭರವಸೆ ನೀಡಿ ಹೋಗುವ ಜನರಲ್ಲ, ಬದಲಾಗಿ ನುಡಿದಂತೆ ನಡೆಯುವ ಜನ, ರಾಜ್ಯದ ಜನರಿಗೆ ಮೊದಲಿನಿಂದಲೂ ಏನು ಹೇಳಿದ್ದೇವೋ ಅದನ್ನು ಮಾಡಿದ್ದೇವೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದೇ ಬರಲಿದೆ. ನಮ್ಮ ಗುರಿ 150. ಇಷ್ಟು ಸ್ಥಾನಗಳನ್ನು ಗೆಲ್ಲುವುದು ಖಚಿತ. ಜನರು ಪಕ್ಷದ ಗ್ಯಾರಂಟಿಗಳ ಬಗ್ಗೆ ಖುಷಿ ವ್ಯಕ್ತಪಡಿಸುತ್ತಿದ್ದು, ಅವುಗಳ ಬಗ್ಗೆ ಇನ್ನಷ್ಟು ಪ್ರಚಾರ ನಡೆಸುವಂತೆ ತಿಳಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, 'ಪ್ರಣಾಳಿಕೆ ಎಂಬುದು ಕೇವಲ ಮತಗಳಿಕೆಯ ಸಾಧನವಲ್ಲ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಇಡುವ ಬದಲಾವಣೆಯ ಹೆಜ್ಜೆ. ನಾವು ಕೊಡುವ ಭರವಸೆಗಳನ್ನು ಐದು ವರ್ಷದ ಅವಧಿಯಲ್ಲಿ ಈಡೇರಿಸುವ ಕೆಲಸ ಮಾಡುತ್ತೇವೆ. ಈ ಹಿಂದೆ 2013ರಲ್ಲಿ ನಾವು ಕೊಟ್ಟ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ 600 ಭರವಸೆಗಳ ಪೈಕಿ ಕೇವಲ ಶೇ.10ರಷ್ಟು ಮಾತ್ರ ಈಡೇರಿಸಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.
'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.75ಕ್ಕೆ ಏರಿಕೆ ಮಾಡುತ್ತೇವೆ. ನಾವು ಹಿಂದು ಳಿದ ವರ್ಗ, ಅಲ್ಪ ಸಂಖ್ಯಾತರ ಬದಲಾವಣೆಗೆ ಅನೇಕ ಕಾರ್ಯ ಕ್ರಮಗಳನ್ನು ಅನುಷ್ಠಾನಗೊಳಿಸಿದ್ದೇವೆ. ಆದರೆ, ಬಿಜೆಪಿ ಜನಸಾ ಮಾನ್ಯರಿಗೆ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ವಿಫಲ ವಾಗಿದೆ. ಅದಕ್ಕೆ ಮುಸ್ಲಿಮರ ಮೀಸಲಾತಿ ರದ್ದು ಮಾಡಿರುವುದೇ ಸಾಕ್ಷಿ ಎಂದು ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಅಧ್ಯಕ್ಷಡಿ.ಕೆ ಶಿವಕುಮಾರ್ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ. ಪರಮೇಶ್ವರ್, ಮಾಜಿ ಸಚಿವೆ ರಾಣಿ ಸತೀಶ್, ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ ಉಪಸ್ಥಿತರಿದ್ದರು.