ಕಾರವಾರ: ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶ ಕರ್ನಾಟಕ ಸರ್ಕಾರ ನೀಡುವ 2018-19ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಭಾಜನವಾಗಿದೆ.
ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದ್ದು ತಲಾ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿಯನ್ನು ಒಳಗೊಂಡಿದೆ.
ವ್ಯವಸ್ಥಾಪನಾ ಸಂಸ್ಥೆಗಳ ಪೈಕಿ ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ, ಟ್ರಸ್ಟ್, ಇತರೆ ವಲಯದಿಂದ ಪ್ರಶಸ್ತಿಗೆ ಶಿಫಾರಸು ಮಾಡಲು ಸರ್ಕಾರದ ಜೀವಿಪರಿಸ್ಥಿತಿ ಮತ್ತು ಪರಿಸರ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು 2018-19ನೇ ಸಾಲಿನ ಪ್ರಶಸ್ತಿ ಆಯ್ಕೆಗೆ ರಾಜ್ಯಾದ್ಯಂತ ಆಹ್ವಾನಿಸಲಾದ ಅರ್ಜಿಗಳ ಪರಿಶೀಲನೆ ನಡೆಸಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಸಂಸ್ಥೆಗಳ ವಿಭಾಗದಲ್ಲಿ ಬೆಂಗಳೂರು ನಗರ ಸುಲ್ತಾನಪಾಳ್ಯದ ಸಹಜ ಸಮೃದ್ಧ, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಕೊಪ್ಪಳ ಜಿಲ್ಲೆಯ ಕೊಪ್ಪಳ ನಗರಸಭೆ ಪ್ರಶಸ್ತಿಗೆ ಆಯ್ಕೆಯಾಗಿವೆ.
ವ್ಯಕ್ತಿಗಳ ವಿಭಾಗದಲ್ಲಿ ಬೆಂಗಳೂರು ನಗರ ಚಂದ್ರಲೇಔಟ್ನ ಕೆಂಪಸಿದ್ದೇಗೌಡ, ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ತಲಕಾಡು ಗ್ರಾಮ ಪಂಚಾಯ್ತಿ ಸದಸ್ಯ ಡಾ.ತಿಪ್ಪೇಕಾಳಿ ರಂಗನಾಥ್ ಹಾಗೂ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕು ಇಂದೂರ ಪರಿಸರ ಪ್ರೇಮಿ ಬಸವರಾಜ್ ಬಸಪ್ಪ ಇವರು ಪ್ರಶಸ್ತಿಗಾಗಿ ಆಯ್ಕೆಯಾಗಿದ್ದಾರೆ.