ಖರೀದಿಸಿದ ವಸ್ತುವಿಗೆ ರಸೀದಿ ಪಡೆಯಿರಿ : ನ್ಯಾ. ಮಾಯಣ್ಣ

Source: S O News | By I.G. Bhatkali | Published on 10th January 2024, 1:14 PM | Coastal News |

ಕಾರವಾರ: ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ಗ್ರಾಹಕರು ತಮ್ಮ ಖರೀದಿಗೂ ಮುನ್ನ ವಸ್ತುವಿನ ತೂಕ, ಅಳತೆ, ಗುಣಮಟ್ಟ, ಅವಧಿ ಎಲ್ಲವನ್ನೂ ಪರಿಶೀಲಿಸಿ ಖರೀದಿಸಬೇಕು ಮತ್ತು ಖರೀದಿಸಿದ ವಸ್ತುವಿನ ಸೂಕ್ತ ಬಿಲ್‌ನ್ನು ಪಡೆಯುವುದು ಅತ್ಯಂತ ಮುಖ್ಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್ ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾನೂನು ಮಾಪನ ಶಾಸ್ತ್ರ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತೆ ಇಲಾಖೆ, ಕರ್ನಾಟಕ ಆಹಾರ ನಿಗಮ ಹಾಗೂ ದಿವೇಕರ ವಾಣಿಜ್ಯ ಕಾಲೇಜು ಪಿ.ಜಿ. ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ‘ಇ-ಕಾಮರ್ಸ ಮತ್ತು ಡಿಜಿಟಲ್ ವ್ಯಾಪಾರದ ಯುಗದಲ್ಲಿ ಗ್ರಾಹಕರ ರಕ್ಷಣೆ’ ಎಂಬ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ಕೆಲವು ವರ್ಷಗಳಲ್ಲಿ ಪ್ರತಿಯೊಬ್ಬರು ಹೆಚ್ಚಾಗಿ ಇ-ಕಾಮರ್ಸ ಮತ್ತು ಆನ್‌ಲೈನ್ ಮೂಲಕ ವಸ್ತುಗಳ ಖರೀದಿ ಹಾಗೂ ಸೇವೆ ಪಡೆಯುತ್ತಿದ್ದಾರೆ. ಗ್ರಾಹಕರಿಗೆ ತಾವು ಕೊಂಡುಕೊಳ್ಳುವ ವಸ್ತುವಿನ ಗುಣಮಟ್ಟ, ತೂಕ ಪರಿಶೀಲನೆ ಮಾಡಿ ಆಯ್ಕೆ ಮಾಡಿಕೊಳ್ಳುವ ಹಕ್ಕು ಇರುತ್ತದೆ. ಈ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸುವುದು ಮುಖ್ಯವಾಗಿದೆ. ತಾವು ಖರೀದಿಸಿದ ವಸ್ತುವಿನ ಗುಣಮಟ್ಟದಲ್ಲಿ ದೋಷ ಕಂಡು ಬಂದರೆ ಅಥವಾ ಸೇವೆಯಲ್ಲಿ ನ್ಯೂನತೆ ಕಂಡು ಬಂದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡು ಕೊಳ್ಳಬಹುದಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ ರಾಯ್ಕರ್ ಮಾತನಾಡಿ, ಗ್ರಾಹಕರ ರಕ್ಷಣಾ ಕಾಯ್ದೆಯು 1986ರಲ್ಲಿ ಜಾರಿಗೆ ಬಂದಿತು. ತದನಂತರ ಕೆಲವು ಬದಲಾವಣೆಗಳೊಂದಿಗೆ ಗ್ರಾಹಕರ ರಕ್ಷಣೆಗೆ 2019 ರಲ್ಲಿ ಹೊಸ ಕಾಯ್ದೆ ಜಾರಿ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮೂಲಕ ವಸ್ತುಗಳ ಖರೀದಿ ಹಾಗೂ ಸೇವೆಯನ್ನು ಪಡೆಯುತ್ತಿದ್ದು ಹೊಸ ಸವಲತ್ತುಗಳೊಂದಿಗೆ ಹೊಸ ಸಮಸ್ಯೆಗಳು ಉದ್ಭವಿಸಿದವು. ಯಾವುದೇ ವಸ್ತುಗಳನ್ನು ಖರೀದಿಸುವಾಗ ಕಡ್ಡಾಯವಾಗಿ ರಸೀದಿ ಪಡೆಯಬೇಕು. ಆಗ ಮಾತ್ರ ಖರೀದಿಸಿದ ಉತ್ಪನ್ನಗಳಲ್ಲಿ ನ್ಯೂನತೆಗಳು ಇದ್ದರೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದಾವೆ ಹೂಡಬಹುದು ಎಂದರು.

ಯಾವುದೇ ವಸ್ತುವನ್ನು ಖರೀದಿಸಿದಾಗ ರಸೀದಿ ಪಡೆಯುವುದು ಮುಖ್ಯವಾಗಿದೆ. ಒಂದು ವೇಳೆ ವಸ್ತುವು ಕಳಪೆ ಗುಣಮಟ್ಟದ್ದು ಎಂದು ಕಂಡು ಬಂದರೆ ಖರೀದಿಸಿದಾಗಿನ ಅಗತ್ಯ ದಾಖಲಾತಿಗಳನ್ನು ಒದಗಿಸಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಕೆ.ವಿ. ಸುರೇಂದ್ರ ಕುಮಾರ ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ, ನ್ಯಾಯವಾದಿ ಪದ್ಮಾ ಕೆ ತಾಂಡೆಲ್ , ಕಾಮರ್ಸ ಮತ್ತು ಡಿಜಿಟಲ್ ಟ್ರೇಡ್‌ನಲ್ಲಿ ಆನ್ ಲೈನ್ ಮುಖಾಂತರ ವಸ್ತುಗಳನ್ನು ಖರೀದಿಸುವಾಗ ಎಚ್ಚರ ವಹಿಸುವದು ಅವಶ್ಯ. ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಮೂಲಕ ವಸ್ತುಗಳನ್ನು ಖರೀದಿಸಿ ಮೋಸ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಕಡಿಮೆ ಬೆಲೆಗೆ ಜಾಹೀರಾತು ನೀಡಿದಾಗ ಇದಕ್ಕೆ ಮಾರುಹೋಗುವ ಗ್ರಾಹಕರು ವಸ್ತುಗಳನ್ನು ಖರೀದಿಸಿ ಮೋಸ ಹೋಗುತ್ತಾರೆ. ಖರೀದಿಸುವ ವಸ್ತುಗಳ ಗುಣಮಟ್ಟ ಪರಿಶೀಲಿಸಿ ಖರೀದಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆ ಮತ್ತು ಆಹಾರ ಸುರಕ್ಷತೆ ಇಲಾಖೆಯಿಂದ ಏರ್ಪಡಿಸಲಾದ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ನೈನಾ ಅಶೋಕ ಕಾಮಟೆ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಎನ್. ಜಾಂಬಾವಳಿಕರ್, ದಿವೇಕರ ವಾಣಿಜ್ಯ ಕಾಲೇಜು ಮತ್ತು ಪಿ.ಜಿ. ಕೇಂದ್ರದ ಪ್ರಾಂಶುಪಾಲ ಡಾ. ಕೇಶವ ಕೆ. ಜಿ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ , ಜಿಲ್ಲಾ ತೂಕ ಮತ್ತು ಅಳತೆ, ಕಾನೂನು ಮಾಪನ ಶಾಸ್ತç ಇಲಾಖೆಯ ಸಹಾಯಕ ನಿಯಂತ್ರಕ ದೇವರಾಜ್ ಮತ್ತಿತರರು ಇದ್ದರು.

Read These Next