ಕೋಲಾರ, ಜುಲೈ 19 :ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳು ಕೇವಲ ಭಾರತೀಯರಿಗೆ ಮಾತ್ರವೇ ಅಲ್ಲದೆ ಇಡೀ ವಿಶ್ವÀಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.
ನಗರದ ಟಿ.ಚನ್ನಯ್ಯರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಮೂರು ನುಡಿ-ನೂರು ದುಡಿ’ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಕುರಿತು ವಿಶ್ವದ ಪ್ರತಿಯೊಬ್ಬರಿಗೂ ತಿಳಿಸಿಕೊಡಬೇಕೆಂಬ ಉದ್ದೇಶದಿಂದ ಸರ್ಕಾರವು ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ವಿಶ್ವ ಸಮ್ಮೇಳನವನ್ನು ಆಯೋಜಿಸಿದೆ. ಅಂಬೇಡ್ಕರ್ ಅವರ ತತ್ವಗಳನ್ನು ಮಾತನಾಡುವುದಕ್ಕಿಂತ ಹೆಚ್ಚಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಪ್ರತಿಯೊಂದು ಜಿಲ್ಲೆಯಲ್ಲಿಯೂ ದೀನದಲಿತರು ಇದ್ದಾರೆ. ಅಂಬೇಡ್ಕರ್ ಅವರು ತಳ ಸಮುದಾಯದಲ್ಲಿ ಜನಿಸಿದರೂ ಸಹ ಅವರ ದೂರದೃಷ್ಠಿ, ಪ್ರತಿಭೆಯು ಅಪಾರವಾದುದು. ಪ್ರತಿಭೆಯು ಯಾವುದೇ ಸಮುದಾಯದ ಸ್ವತ್ತಲ್ಲ. ಅಂಬೇಡ್ಕರ್ ಅವರ ಜೀವನಗಾಥೆಯನ್ನು ಪ್ರತಿಯೊಬ್ಬರು ಅರಿತು ನಡೆಯಬೇಕು ಎಂದು ತಿಳಿಸಿದರು.
ಆದುನಿಕ ಕಾರ್ಮಿಕ ಕಾಯ್ದೆ ಬರಲು ಅಂಬೇಡ್ಕರ್ ಅವರ ಪಾತ್ರ ಪ್ರಮುಖವಾದುದು. 14 ಗಂಟೆಗಳ ಕಾಲ ದುಡಿಮೆ ಮಾಡುತ್ತಿದ್ದ ಅವಧಿಯನ್ನು ಕಾಯ್ದೆ ಮೂಲಕ 8 ಗಂಟೆಗೆ ಇಳಿಸಲಾಯಿತು. ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದ ಮೊದಲ ಭಾರತೀಯ ಎಂಬ ಹೆಮ್ಮೆ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಕೋಲಾರ ಜಿಲ್ಲೆಯಲ್ಲಿ ಶೇ.35 ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಇವೆ. ಈ ಸಮುದಾಯಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆ ಮೂಲಕ ಶೈಕ್ಷಣ ಕವಾಗಿ ಸಾಧನೆ ಮಾಡಿ ಇತರೆ ಜಿಲ್ಲೆಗಳಿಗೆ ಮಾದರಿಯಾಗಿ ಬೆಳೆಯಬೇಕು ಎಂದರು.
ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಕುರಿತು ಹೋರಾಟ ಗೀತೆಗಳು, ಚರ್ಮವಾದ್ಯಗಳ ಕಲಾಪ್ರಕಾರಗಳು ಮೂಡಿಬಂದವು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಎಂ.ಆಂಜಿನಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಯಣ್ಣ, ಬೆಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರದ ಕೋಲಾರ ಜಿಲ್ಲಾ ನಿರ್ದೇಶಕರಾದ ಡಾ.ಡೋಮಿನಿಕ್, ಮುಖಂಡರಾದ ಸಿ.ಮುನಿಯಪ್ಪ, ಕೃಷ್ಣಪ್ಪ, ಚಂದ್ರಶೇಖರ್, ಪಂಡಿತ್ ಮುನಿವೆಂಕಟಪ್ಪ, ವಿಜಿಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ