ಕೋಲಾರ, ಸೆಪ್ಟೆಂಬರ್ 09 :ಕ್ರೀಡಾಪಟುಗಳು ಸ್ಪರ್ಧಾ ಮನೋಭಾವನೆಯನ್ನು ಹೊಂದಿರಬೇಕಲ್ಲದೆ ಸೋಲು ಮತ್ತು ಗೆಲುವುವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋಲೇ ಗೆಲುವಿನ ಸೋಪಾನ ಎಂದು ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರಾದ ಶ್ರೀ ಸೂಲೂರು ಎಂ. ಆಂಜಿನಪ್ಪ ರವರು ಕಿವಿಮಾತು ಹೇಳಿದರು.
ನಗರದ ಶ್ರೀ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಸೈನಿಕರು ತಮ್ಮ ಪ್ರಾಣದ ಹಂಗು ತೊರೆದು ನಮ್ಮ ದೇಶ ಕಾಯುತ್ತಿದ್ದಾರೆ. ರೈತರು ಈ ದೇಶದ ಜನತೆಗೆ ಬಿಸಿಲು ಮಳೆ ಎನ್ನದೆ ದುಡಿದು ಅನ್ನ ನೀಡುತ್ತಿದ್ದಾರೆ. ಅವರಂತೆ ದೇಶದ ಮುಂದಿನ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಹಾಗಾಗಿ ವಿದ್ಯಾರ್ಥಿಗಳಾದ ತಾವು ಶಿಸ್ತಿನಿಂದ ಇದ್ದು ಮುಂದೆ ಈ ದೇಶದ ಉತ್ತಮ ರಾಜಕಾರಣ ಗಳು ಹಾಗೂ ಆದರ್ಶ ಅಧಿಕಾರಿಗಳಾಗಿ ರೂಪುಗೊಳ್ಳಬೇಕು ಎಂದು ಕ್ರೀಡಾಪಟುಗಳಲ್ಲಿ ಸ್ಫೂರ್ತಿ ತುಂಬಿದರು.
ಜಿಲ್ಲಾ ಪಂಚಾಯತ್ನ ಸದಸ್ಯರಾದ ನಂಜುಂಡಪ್ಪ ಅವರು ಮಾತನಾಡಿ, ಕ್ರೀಡೆಯು ಆರೋಗ್ಯಕ್ಕೆ ಉತ್ತಮವಾದದ್ದು. ಹಾಗಾಗಿ ಎಲ್ಲರೂ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲೆ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಎಂದು ಆಶಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ಮಂಜುನಾಥ್ ಅವರು ಮಾತನಾಡಿ, ಕ್ರೀಡೆಯ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೆ ಕ್ರೀಡೆಯಿಂದ ಆರೋಗ್ಯಕರ ಜೀವನ ಸಾಗಿಲು ಸಾಧ್ಯ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿಜೇತರಾದವರು ಬೆಂಗಳೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗುವರು. ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದವರು ವಿಭಾಗೀಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸರ್ಕಾರದ ಸಾಧನೆಗಳ ಕುರಿತು ಪ್ರಚಾರ ಕಾರ್ಯಕ್ರಮವನ್ನು ಪ್ರದರ್ಶಿಸಲಾಯಿತು. ಕಲಾತಂಡವು ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಕೃಷಿಭಾಗ್ಯ, ಕ್ರೀಡಾ ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಸೇರಿದಂತೆ ಇನ್ನೂ ಮುಂತಾದ ಜನಪರ ಯೋಜನೆ ಕುರಿತು ನಾಟಕದ ಮೂಲಕ ಪ್ರಚಾರ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಗೀತಾ, ಜಿಲ್ಲಾ ದೈಹಿಕ ಸಂಘದ ಅಧ್ಯಕ್ಷರಾದ ಶ್ರೀನಿವಾಸಗೌಡ ಸೇರಿದಂತೆ ಮುಂತಾದವರು ಉಪಸ್ಥಿರಿದ್ದರು.