ಕೋಲಾರ:ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಆಗಸ್ಟ್ 27ಕ್ಕೆ ಚಾಲನೆ : ಕೆ.ಆರ್.ರಮೇಶ್ ಕುಮಾರ್
ಕೋಲಾರ, ಆಗಸ್ಟ್ 21: ಸ್ವಾತಂತ್ರ್ಯ ಬಂದ ನಂತರ ಈ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಮಾನ್ಯ ಮುಖ್ಯ ಮಂತ್ರಿಗಳು ವಿವಿಧ ಇಲಾಖೆಗಳ ಮೂಲಕ ಹೆಚ್ಚು ಅನುಧಾನ ನೀಡಿದ್ದು ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿದೆ. ಈ ಅಭಿವೃದ್ದಿ ಕಾಮಗಾರಿಗಳನ್ನು ಮಾನ್ಯ ಮುಖ್ಯ ಮಂತ್ರಿಗಳು ಆಗಸ್ಟ್ 27 ರಂದು ಉದ್ಘಾಟಿಸುವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ತಿಳಿಸಿದರು.
ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುತ್ತಿರುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿಗಳು ಜಿಲ್ಲಾಡಳಿತ ಭವನ, ಸುವರ್ಣ ಕನ್ನಡ ಭವನ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಸತಿ ಕಾಲೇಜ್, ಗಾಂಧಿ ಭವನ ಶಂಕುಸ್ಥಾಪನೆ, ಡಿಜಿಟಲ್ ನರ್ವ್ ಸೆಂಟರ್ ಜಾಲ, ಸ್ಕಾಟ್ಸ್ ಗಾರ್ಮೆಂಟ್, ದೇವರಾಜ ಅರಸು ಭವನ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಸ್ಕಾಂ ವಿದ್ಯುತ್ ಸಬ್ಸ್ಟೇಷನ್ಗಳು ಸೇರಿದಂತೆ ಮುಂತಾದ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸುವರು ಎಂದರು.
ಸರ್ಕಾರವು ರಾಜ್ಯದಲ್ಲಿ 5 ವಸತಿ ಕಾಲೇಜುಗಳನ್ನು ಪ್ರಾರಂಭಿಸುತ್ತಿದೆ. ಆ ಪೈಕಿ ಒಂದು ಕಾಲೇಜನ್ನು ಕೋಲಾರದಲ್ಲಿ ಸ್ಥಾಪಿಸುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಈ ಕಾಲೇಜುಗಳಲ್ಲಿ ಬಿ.ಎ, ಬಿ.ಎಸ್ಸಿ, ಬಿ.ಕಾಂಗಳ ತಲಾ 3 ತರಗತಿಗಳಂತೆ ಒಟ್ಟು 09 ತರಗತಿಗಳು ನಡೆಯುತ್ತವೆ. ಇದರಲ್ಲಿ ಶೇ.60 ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದು ಉಳಿದ ಶೇ.40 ರಷ್ಟು ಸಾಮಾನ್ಯ ವಿದ್ಯಾರ್ಥಿಗಳಿಂದ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ನೀರಿನ ಕೊರತೆ ಎಂಬ ಕಾರಣ ನೀಡಿ ಕೈಗಾರಿಕೆಗಳನ್ನು ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಹಿಂದೇಟು ಹಾಕುತ್ತಿದ್ದರು. ಆದರೆ ಕೆ.ಸಿ. ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳಿಂದ ಕೋಲಾರ ಜಿಲ್ಲೆಯ ಕೆರೆಗಳು ತುಂಬಲಿದೆ. ಹಾಗಾಗಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದರು.
ಶ್ರೀನಿವಾಸಪುರದಲ್ಲಿ 25 ಎಕರೆ ಪ್ರದೇಶದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲಾಗುವುದು. ಈ ಆಸ್ಪತ್ರೆಯ ನಿರ್ಮಾಣದಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜನತೆಗೆ ಎಲ್ಲಾ ಆರೋಗ್ಯ ಸೌಲಭ್ಯಗಳು ಹಾಗೂ ಆಧುನಿಕ ಆರೋಗ್ಯ ಸೇವೆಗಳು ದೊರೆಯಲಿವೆ. ಈ ಆಸ್ಪತ್ರೆಯಲ್ಲಿ ಗೈನಿಕಾಲಾಜಿ, ಹೃದ್ರೋಗ (ಕಾರ್ಡಿಯಾಲಜಿ), ನೆಪ್ರೋಲಜಿ, ನ್ಯೂರಾಲಜಿ, ಆರ್ಥೋಪೆಡಿಕ್ಸ್ ವಿಭಾಗಗಳ ಸೌಲಭ್ಯಗಳು ಲಭ್ಯವಿರಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾವು ಬೆಳೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪಕುಲಪತಿ ಕೆಂಪರಾಜ್, ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹಿಣ ಕಟೋಚ್ ಸೆಫೆಟ್, ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಶುಭಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.