ಕೋಲಾರ, ಜುಲೈ 22 : ಭಾರತವು ವಿಶ್ವದಲ್ಲೇ ಅತೀದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಮೂಲ ಆಧಾರ ಸ್ತಂಭಗಳು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಅಭಿಪ್ರಾಯಿಸಿದರು.
ನಗರದ ಪ್ರಥಮ ಧರ್ಜೆ ಕಾಲೇಜಿನ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಇಂಟರ್ಯಾಕ್ಟೀವ್ ಸ್ಕೂಲ್ ಎಂಗೇಜ್ಮೆಂಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ ಒಂದೆರಡು ವರ್ಷಗಳಲ್ಲಿ ನೀವು ಮತದಾನ ಪ್ರಕ್ರಿಯೆಯಲ್ಲಿ ಪಾಲುದಾರರಾಗುತ್ತೀರಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮತದಾನ ಪ್ರಕ್ರಿಯೆಯು ಮಾನವನಿಗೆ ಲಭಿಸಿರುವ ಅಮೂಲ್ಯ ಹಕ್ಕು. ಈ ಹಕ್ಕನ್ನು ನಿಷ್ಪಕ್ಷಪಾತವಾಗಿ, ಪ್ರಾಮಾಣ ಕತೆಯಿಂದ ಪಾಲಿಸಬೇಕು. ಮತದಾನ ಪ್ರಕ್ರಿಯೆಯಿಂದ ದಕ್ಷ, ಸುಭೀಕ್ಷ, ಪ್ರಾಮಾಣ ಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದು. ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಮತದಾನವನ್ನು ಮಾಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮತದಾನ ಪ್ರಕ್ರಿಯೆ, ಮತದಾನ ಮಾಡಲು ಅವಶ್ಯಕ ಇರುವ ಮಾನದಂಡಗಳು ಮುಂತಾದ ಪ್ರಶ್ನೆಗಳಿಗೆ ಜಿಲ್ಲಾಧಿಕಾರಿಗಳ ಸ್ಥಳದಲ್ಲಿಯೇ ಉತ್ತರಗಳನ್ನು ನೀಡಿ ವಿದ್ಯಾರ್ಥಿಗಳ ಗೊಂದಲಗಳನ್ನು ನಿವಾರಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಮಾತನಾಡಿ, ಮತದಾರರು ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದಾಗ ಮಾತ್ರ ಉತ್ತಮ ಸೇವೆ ಹಾಗೂ ಪ್ರತಿಫಲ ಪಡೆದುಕೊಳ್ಳಲು ಸಾಧ್ಯ. ಐರೋಪ್ಯ ರಾಷ್ಟ್ರಗಳಲ್ಲಿ ಸೇನಾ ಆಡಳಿತ ಇದ್ದು ಜನರು ಇಂದಿಗೂ ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ಇದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾದುದು. 2008 ರ ಚುನಾವಣೆಯಲ್ಲಿ ಕೇವಲ ಒಂದು ಮತದಿಂದ ಅಭ್ಯರ್ಥಿಯು ಗೆಲುವು ಸಾಧಿಸಿದ್ದನ್ನು ನಾವು ಸ್ಮರಿಸಬಹುದು. ಆದ್ದರಿಂದ ಪ್ರತಿಯೊಬ್ಬರೂ ತಪ್ಪದೆ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಥಮ ಧರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಧುಲತಾ ಮೋಸಸ್, ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ವೆಂಕಟಸ್ವಾಮಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.