ಹೊಸದಿಲ್ಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ರವಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವನ್ನು ಪ್ರತಿಪಾದಿಸಿದರು.
ಸೋನಿಯಾಗಾಂಧಿ ನಿವಾಸ 10 ಜನಪಥದಲ್ಲಿ ನಡೆದ ಮಾತುಕತೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ನಿತೀಶ್ ಕುಮಾರ್ ಅವರು, ಬಿಜೆಪಿಯನ್ನು ಪರಾಭವಗೊಳಿಸಲು ನಾವು ಎಲ್ಲ ಪ್ರತಿಪಕ್ಷಗಳನ್ನು ಒಂದುಗೂಡಿಸಬೇಕಾಗಿದೆ. ಕಾಂಗ್ರೆಸ್ ಪಕ್ಷವೀಗ ಅದರ ನೂತನ ಅಧ್ಯಕ್ಷರ ಚುನಾವಣೆಯಲ್ಲಿ ಪ್ರಕ್ರಿಯೆಯಲ್ಲಿ ತೊಡಗಿದೆ. ಈ ಚುನಾವಣೆ ಮುಗಿದ ಬಳಿಕ ನಾವು ಮತ್ತೊಮ್ಮೆ ಭೇಟಿಯಾಗೋಣವೆಂದು ಸೋನಿಯಾ ಹೇಳಿದ್ದಾರೆ' ಎಂದರು.
ಸೋನಿಯಾ ಭೇಟಿಗೆ ಮುನ್ನ ನಿತೀಶ್ ಕುಮಾರ್ ಅವರು ಇಂದು ಬೆಳಗ್ಗೆ ಹರ್ಯಾಣದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್ಎಲ್ ಡಿ)ದ ರಾಲಿಯಲ್ಲಿ ಭಾಗವಹಿಸಿದ್ದರು.