ಬೀದರ : ಯುವಜನಾಂಗ ಕೃಷಿ ಕ್ಷೇತ್ರದ ಕಡೆಗೆ ಒಲವು ತೋರಿಸುವ ನಿಟ್ಟಿನಲ್ಲಿ ಯೋಜನೆಯೊಂದನ್ನು ರೂಪಿಸಬೇಕಿದೆ ಎಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಕಛೇರಿ ಸಂಭಾಣಗಣದಲ್ಲಿ ಶುಕ್ರವಾರ ಕೇಂದ್ರ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಯಸ್ಕ ನಾಗರಿಕರೇ ಕಾಣಿಸುತ್ತಿದ್ದು, ಯುವಕರು ಕೂಡ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕಿದೆ. ಕೃಷಿ ಕ್ಷೇತ್ರದಲ್ಲಿ ಸುಧಾರಣೆಯಾಗಬೇಕೆಂದರೆ ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಳ್ಳಬೇಕು. ಆಧುನಿಕ ಉಪಕರಣಗಳನ್ನು ಸಮರ್ಪಕವಾಗಿ ಬಳಕೆಯಾಗಬೇಕು. ಕೃಷಿ ಕ್ಷೇತ್ರವು ಹಿಂದಿನಂತಿರದೇ ಸಾಕಷ್ಟು ಬದಲಾವಣೆಗಳನ್ನು ಕಂಡಿದೆ. ನಾವ್ಯಾರಿಗೂ ಕಮ್ಮಿಯಿಲ್ಲ ಎನ್ನುವಂತೆ ಪ್ರಗತಿ ಸಾಧಿಸಿದ ರೈತರು ನಮ್ಮೆದುರಿಗೆ ಇದ್ದಾರೆ. ಈ ಬಗ್ಗೆ ಯುವಜನತೆಗೆ ಮನವರಿಕೆ ಮಾಡಿಕೊಟ್ಟು ಯುವಕರು ಕೃಷಿ ಕ್ಷೇತ್ರಕ್ಕೆ ಬರುವಂತೆ ಪ್ರೇರಣೆ ನೀಡುವಂತಹ ಕೆಲಸ ಆಗಬೇಕಿದೆ ಎಂದು ಸಚಿವರು ಪ್ರತಿಪಾದಿಸಿದರು.