ಮಂಡ್ಯ : ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ ಬಂದಾಗ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಶೀಘ್ರವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿರವರು ಅಧಿಕಾರಿಗಳಿಗೆ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಅನುಸೂಚಿತ ಜಾತಿ ಹಾಗೂ ಬುಡಕಟ್ಟುಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ 1989 ಹಾಗೂ ನಿಯಮ 1995 ಪ್ರಕಾರ ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳನ್ನು ಪರಿಶೀಲಿಸಿ ನೊಂದ ಸಂತ್ರಸ್ತರ ಸಮಸ್ಯೆ ನಿವಾರಿಸಲು ಕ್ರಮವಹಿಸಲಾಗುವುದು ಎಂದರು.
ಜಿಲ್ಲಾ ಕೇಂದ್ರದ ಡಾ. ಬಿ. ಆರ್. ಅಂಬೇಡ್ಕರ್ ಭವನದ ಕಾಮಗಾರಿಯು ಮುಕ್ತಯವಾಗದಿರುವ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಿ ಪೂರ್ಣಗೊಳ್ಳಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಪಾಂಡವಪುರ, ಮದ್ದೂರು, ಮಳವಳ್ಳಿ ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಕೇರ್ ಪೇಟೆ ತಾಲೂಕಿನಲ್ಲಿ ಪೂರ್ಣವಾಗದ ಅಂಬೇಡ್ಕರ್ ಭವನಗಳನ್ನು ಪೂರ್ಣಗೊಳಿಸಿ, ತಾಲೂಕುಗಳಲ್ಲಿ ಬಾಬು ಜಗಜೀವನರಾಂ ಭವನ ಹಾಗೂ ಬೌದ್ದ ವಿಹಾರಗಳ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು ಒದಗಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ಜಮೀನನ್ನು ಸಕ್ರಮಗೊಳಿಸುವ ಸಂಬಂಧ ಸಾಗುವಳಿ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿಜವಾದ ಫಲಾನುಭವಿಗಳನ್ನು ಗುರುತಿಸಿ ಸಕ್ರಮಗೊಳಿಸಲು ಕ್ರಮವಹಿಸಲಾಗುವುದು ಎಂದರು.
ಮಂಡ್ಯ ತಾಲೂಕಿನ ಸಂಪಹಳ್ಳಿ ಗ್ರಾಮದ ದಲಿತ ಕುಟುಂಬಗಳ ನಿವೇಶನವನ್ನು ಶೀಘ್ರವೇ ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆ.ಆರ್. ಪೇಟೆ ಪಟ್ಟಣದ ಆದಿದ್ರಾವಿಡ ಕಾಲೋನಿಗೆ ರಸ್ತೆ ಕಲ್ಪಿಸುವಲ್ಲಿ ಶೀಘ್ರವೇ ತೀರ್ಮಾನಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಉಪವಿಭಾಗ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರ ಕುಂದುಕೊರತೆಗಳ ಸಭೆಗಳನ್ನು ನಡೆಸಿ ಅವರ ಸಮಸ್ಯೆಗಳ ನಿವಾರಣೆಗೆ ಸ್ಥಳದಲ್ಲಿಯೇ ಪರಿಹಾರ ಕ್ರಮಗಳನ್ನು ಕಂಡುಕೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿನ ಪ್ರತಿಗ್ರಾಮದಲ್ಲಿ ಸ್ಮಶಾನ ಭೂಮಿ ಮಂಜೂರಾಗಿರುವ, ಒತ್ತುವರಿ ತೆರವುಗೊಳಿಸುವ ಹಾಗೂ ಸ್ಮಶಾನ ಅಭಿವೃದ್ಧಿಗೊಳಿಸುವ ಬಗ್ಗೆ ನರೇಗಾ ಕ್ರಿಯಾ ಯೋಜನೆಯಲ್ಲಿ ಸೇರಿಸಿಕೊಂಡು ಸ್ಮಶಾನ ಭೂಮಿಗಳಿಗೆ ಕಾಂಪೌಂಡ್ ಹಾಕಲು, ಶವಸಂಸ್ಕಾರಕ್ಕೆ ಶೀಟ್ ನಿರ್ಮಿಸಲು, ಸಸಿಗಳನ್ನು ಹಾಕಲು, ಅಲ್ಲಿ ಪೂರಕವಾದ ಮೂಲಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಿವ್ಯಪ್ರಭು, ನಾಗಮಂಗಲ ಶಾಸಕರಾದ ಸುರೇಶ್ ಗೌಡ, ಅಪರ ಪೋಲೀಸ್ ವರಿಷ್ಠಾಧಿಕಾರಿ ಧನಂಜಯ, ಮಂಡ್ಯ ಉಪವಿಭಾಗಧಿಕಾರಿ ಐಶ್ವರ್ಯ, ಪಾಂಡವಪುರ ಉಪವಿಭಾಗಧಿಕಾರಿ ಶಿವನಂದ ಮೂರ್ತಿ, ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ರಂಗೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸೋಮಶೇಖರ್ ಮತ್ತು ದಲಿತ ಸಂಘಟನೆಗಳ ಮುಖಂಡರುಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.