ಕಾರವಾರ: ರಾಜ್ಯದ 33 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಕಾರವಾರ: ಕರ್ನಾಟಕದಲ್ಲಿಂದು ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆ ಮಾಡಲಾಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯದ ಸಂಪೂರ್ಣ ಚಿತ್ರಣವೇ ಬದಲಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಅವರು ಅಭಿಪ್ರಾಯಪಟ್ಟರು.
ಯೋಜನೆಯ ವ್ಯಾಪ್ತಿಗೊಳಪಡುವ ರಾಜ್ಯದ ವಿವಿಧ ಜಿಲ್ಲೆಯಲ್ಲಿ ನಡೆದಂತೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಶನಿವಾರ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪೋಯೋಗಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ, ರಾಜ್ಯದ 33 ಹೆದ್ದಾರಿಗಳ ಪೈಕಿ 8 ಪೂರ್ಣಗೊಂಡಿರುವ ಹಾಗೂ ನಿರ್ಮಾಣಗೊಳ್ಳಲಿರುವ 25 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಒಟ್ಟು 10,904 ಕೋಟಿ ರೂ. ವೆಚ್ಚದಲ್ಲಿ 1,197 ಕಿ.ಮೀ ಉದ್ದದ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ರಾಜ್ಯದ ಒಟ್ಟು 33 ರಾಷ್ಟೀಯ ಹೆದ್ದಾರಿ ಕಾಮಗಾರಿ ಯೋಜನೆಯಲ್ಲಿ ಜಿಲ್ಲೆಯ ಬಹು ನಿರೀಕ್ಷಿತ ಶಿರಸಿ-ಕುಮಟಾ ಬೇಲೇಕೇರಿ ರಾಜ್ಯ ಹೆದ್ದಾರಿಗಳಾದ 766ಇ ಹಾಗೂ 766ಇಇ ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆರಿಸಲಗುತ್ತಿದೆ. ಇದಕ್ಕಾಗಿ 440 ಕೋಟಿ ರೂ ವೆಚ್ಚ ಖರ್ಚಾಗಲಿದ್ದು, 60 ಕಿಲೋ ಮೀಟರ್ ರಸ್ತೆ ಕಾಮಗಾರಿಯನ್ನು 2020 ಡಿಸೆಂಬರ್ ರಿಂದ ಆರಂಭಿಸಿ 2022 ಡಿಸೆಂಬರ್ಗೆ ಪೂರ್ಣಗೊಳಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗೋವಾ-ಕರ್ನಾಟಕ ಗಡಿಯಿಂದ ಕುಂದಾಪುರ ಗಡಿಯವರೆಗೆ 187.24 ಕಿಮೀ ಉದ್ದದ 2,639 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ 66ನ್ನು ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯದ ಅಭಿವೃದ್ಧಿ ಹಾಗೂ ವಿಕಾಸಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಸಹಕಾರ ಸಾಕಷ್ಟು ದೊರೆತಿದ್ದು ಮುಂದಿನ ದಿನಗಳಲ್ಲೂ ಅವಶ್ಯಕವಾಗಿದೆ ಎಂದರು.
ಕೇಂದ್ರ ಹೆದ್ದಾರಿ ಖಾತೆ ರಾಜ್ಯ ಸಚಿವ ವಿ.ಕೆ. ಸಿಂಗ್, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಅಶ್ವಥನಾರಾಯಣ, ಮಾಜಿ ಪ್ರಧಾನಿ ಮತ್ತು ರಾಜ್ಯ ಸಭಾ ಸದಸ್ಯರಾದ ಎಚ್.ಡಿ. ದೇವೆಗೌಡ, ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಂಸದರಾದ ಪ್ರಹ್ಲಾದ ಜೋಶಿ, ಸದಾನಂದಗೌಡ, ನಳೀನಕುಮಾರ ಕಟೀಲ್, ಪಿಯೂಷ್ ಗೋಯಲ್ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸ್ಥಳಿಯವಾಗಿ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಹಾಜರಿದ್ದರು.