ಬೆಂಗಳೂರು : ಪೌಷ್ಟಿಕ ಆಹಾರ ಪದಾರ್ಥಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡುವುದರ ಜೊತೆಗೆ ವೈಯಕ್ತಿಕ ಹಾಗೂ ಶೌಚಾಲಯದ ಶುಚಿತ್ವದ ಬಗ್ಗೆ ಆದ್ಯತೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಚೊಕ್ಕಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ (ಗಾರ್ಮೆಂಟ್ಸ್) ಮಹಿಳಾ ಕಾರ್ಮಿಕರಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಪೌಷ್ಠಿಕ ಆಹಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ಥಳೀಯವಾಗಿ ಸಿಗುವ ಹಸಿರುಸೊಪ್ಪು, ತರಕಾರಿ, ಮೊಳಕೆ ಕಾಳು, ಹಾಲು ಮತ್ತು ಹಾಲಿನ ಉಪಯೋಗಗಳ ಬಳಕೆ, ಇವುಗಳನ್ನು ಉಪಯೋಗಿಸುವುದರ ಜೊತೆಗೆ ಮನೆಯಲ್ಲೇ ತಯಾರಿಸುವ ಆಹಾರ ಪದಾರ್ಥಗಳ ಬಳಕೆ ಹಾಗೂ ಪ್ರತಿ ಆರು ತಿಂಗಳಿಗೊಮ್ಮೆ ಅಲ್ಬೆಂಡೇಸಲ್ ಮಾತ್ರೆ ತೆಗೆದುಕೊಳ್ಳುವುದು ಮೂಲಕ ರಕ್ತಹೀನತೆ ತಡೆಗಟ್ಟಬಹುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು ಹನುಮಂತರಾಜು.ಎನ್., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಜಯಲಕ್ಷ್ಮಿ.ಬಿ, ಗಾರ್ಮೆಂಟ್ಸ್ ವ್ಯವಸ್ಥಾಪಕರು, ಮುಗಬಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶಿವಗಂಗಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.